ಸೋಮವಾರಪೇಟೆ,ಡಿ.೧೮: ಪಾಕಿಸ್ತಾನದ ವಿದೇಶಾಂಗ ಸಚಿವ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಿಂದನಾತ್ಮಕವಾಗಿ ಮಾತನಾಡಿರುವುದು ಖಂಡನೀಯವಾಗಿದ್ದು, ಚೀನಾ ಎದುರು ಭಿಕ್ಷಾಪಾತ್ರೆ ಹಿಡಿದಿರುವ ಪಾಕ್ ತನ್ನ ಎಂದಿನ ಉದ್ದಟತನ ಮೆರೆದಿದೆ ಎಂದು ಆರೋಪಿಸಿ ಸೋಮವಾರಪೇಟೆಯಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಪಾಕಿಸ್ತಾನ ಹಾಗೂ ಅಲ್ಲಿನ ವಿದೇಶಾಂಗ ಸಚಿವನ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಇದರೊಂದಿಗೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಸೆರೆಯಾಗಿರುವ ಮಹಮ್ಮದ್ ಶಾರೀಕ್‌ನ ಪರವಾಗಿ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿರುವುದು ಖಂಡನೀಯ. ಭಯೋತ್ಪಾದನೆಗೆ ಕಾಂಗ್ರೆಸ್ ಪಕ್ಷ ಈ ಹಿಂದಿನಿAದಲೂ ಬೆಂಬಲ ನೀಡುತ್ತಲೇ ಬಂದಿದೆ. ಇದನ್ನು ಈಗಿನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಂದುವರೆಸಿದ್ದಾರೆ ಎಂದು ಆರೋಪಿಸಿದರು.

ಭಯೋತ್ಪಾದಕರ ಪರವಾಗಿ ವಕಾಲತ್ತು ವಹಿಸಿರುವ ಕಾಂಗ್ರೆಸ್‌ಗೆ ಮುಂಬರುವ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಂಜನ್ ಹೇಳಿದರು. ಬಿಜೆಪಿ ಜಿಲ್ಲಾ ವಕ್ತಾರ ಎಂ.ಬಿ. ಅಭಿಮನ್ಯುಕುಮಾರ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಹೆಚ್.ಎನ್. ತಂಗಮ್ಮ, ರೇಣುಕಾ ವೆಂಕಟೇಶ್, ಮೋಹಿನಿ, ಇಂದಿರಾ ಮೋಣಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಸದಸ್ಯರಾದ ಮೃತ್ಯುಂಜಯ, ಬಿ.ಆರ್. ಮಹೇಶ್, ಚೌಡ್ಲು ಗ್ರಾ.ಪಂ. ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಸದಸ್ಯ ಗಣಪತಿ, ಬೇಳೂರು ಗ್ರಾ.ಪಂ. ಅಧ್ಯಕ್ಷ ಬಿ.ಎಂ. ಪ್ರಶಾಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.