ಕೂಡಿಗೆ, ಜ. ೨೩ : ೧೨ ನೇ ಶತಮಾನದ ವಚನಕಾರರಲ್ಲಿ ಶಿವಶರಣ ಅಂಬಿಗರ ಚೌಡಯ್ಯ ವಿಭಿನ್ನ ರೀತಿಯ ವಚನ ಸಾಹಿತ್ಯಕ್ಕೆ ಹೆಗ್ಗಳಿಕೆ ಪಡೆದ ಮಹಾನ್ ಸಂತ. ಇತರೆ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ನಿರ್ದೇಶಕ ಎಂ.ಎನ್. ವೆಂಕಟನಾಯಕ್ ಬಣ್ಣಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ, ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್.), ಕುವೆಂಪು ಕನ್ನಡ ಭಾಷಾ ಸಂಘ, ವಿದ್ಯಾರ್ಥಿ ಸಂಘ ಹಾಗೂ ಎಸ್.ಡಿ.ಎಂ.ಸಿ., ಆಶ್ರಯದಲ್ಲಿ ಏರ್ಪಡಿಸಿದ್ದ ಶಿವಶರಣ ಅಂಬಿಗರ ಚೌಡಯ್ಯರ ಜನ್ಮ ದಿನಾಚರಣೆಯಲ್ಲಿ ಅಂಬಿಗರ ಚೌಡಯ್ಯರ ಸಂಕ್ಷಿಪ್ತ ಜೀವನ ಚರಿತ್ರೆಯನ್ನು ಸಭೆಗೆ ತಿಳಿಸಿದರು.
ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯಲ್ಲಿ ಸ್ಥಾನ ಪಡೆದು ಕಾಯಕವೇ ಕೈಲಾಸ ಎಂಬ ತತ್ವದಡಿ ನಡೆದು ಬಂದ ವ್ಯಕ್ತಿ ಹಾಗೂ ಆಚಾರ-ವಿಚಾರಗಳಲ್ಲಿ ದ್ವಂದ್ವ ಬದುಕನ್ನು ಸಾಗಿಸುವವರ ವಿರುದ್ಧ ಧ್ವನಿ ಎತ್ತಿದ ಮಹಾನ್ ಚೇತನ ಅಂಬಿಗರ ಚೌಡಯ್ಯ ಎಂದರು.
ಅAಬಿಗರ ಚೌಡಯ್ಯ ಭಾವಸಾಗರವನ್ನು ದಾಟಿಸುವ ಅಂಬಿಗ ಎಂಬ ಹೆಗ್ಗಳಿಕೆ ಪಡೆದ ಮಹಾನ್ ವ್ಯಕ್ತಿ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಬದುಕು ಹಸನಾಗಿಸಿಕೊಳ್ಳಬೇಕಿದೆ ಎಂದು ವೆಂಕಟನಾಯಕ್ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮ ಸಂಯೋಜಕ ಮಣಜೂರು ಮಂಜುನಾಥ್ ಮಾತನಾಡಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ. ದಯಾನಂದ ಪ್ರಕಾಶ್, ಕನ್ನಡ ಸಂಘದ ಉಸ್ತುವಾರಿ ಶಿಕ್ಷಕ ಕೆ.ಗೋಪಾಲಕೃಷ್ಣ, ಶಿಕ್ಷಕರಾದ ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಕೆ.ಬಿ.ನಯನ ಇದ್ದರು.