ವೀರಾಜಪೇಟೆ, ಸೆ. ೧೬: ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶವುಳ್ಳ ಶಾಲೆಗಳ ಸುತ್ತಮುತ್ತ ಒಂದು ವರ್ಷದ ಕಾಲಾವಧಿಯಲ್ಲಿ ೫೦ ಲಕ್ಷ ಸಸಿಗಳನ್ನು ನೆಡುವ ವಿನೂತನವಾದ ಕಾರ್ಯಕ್ರಮಕ್ಕೆ ‘ಸಸ್ಯ ಶ್ಯಾಮಲ' ಎಂದು ಹೆಸರಿಡಲಾಗಿದೆ ಎಂದು ವೀರಾಜಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವೀರಾಜ ಪೇಟೆ ಕ್ಷೇತ್ರ ಶಿಕ್ಷಣ ಸಮನ್ವಯಾ ಧಿಕಾರಿಗಳ ಕಚೇರಿ ಹಾಗೂ ಆರ್ಜಿ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ಗಿಡ ನೆಟ್ಟು ಸಸ್ಯ ಶ್ಯಾಮಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರಣ್ಯ ಇಲಾಖೆಯಿಂದ ಒದಗಿಸಲಾಗುವ ವಿವಿಧ ಬಗೆಯ ಸಸಿಗಳನ್ನು, ಆಯಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸುತ್ತಮುತ್ತ ಇರುವ ಸ್ಥಳಗಳಲ್ಲಿ ಗಿಡ ನೆಡುವ ಕಾರ್ಯಕ್ಕೆ ಏಕಕಾಲದಲ್ಲಿ ಚಾಲನೆ ನೀಡಲಾಗಿದೆ. ‘ಸಸ್ಯ ಶ್ಯಾಮಲ' ಕಾರ್ಯಕ್ರಮದಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ, ಪರಿಸರ ಜಾಗೃತಿ ಮತ್ತು ಅರಣ್ಯ ಸಂರಕ್ಷಣೆಯ ಕುರಿತು ಕಾಳಜಿಯನ್ನು ಮೂಡಿಸಲಾಗುತ್ತದೆ ಎಂದರು.

ಈ ಸಂದರ್ಭ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ, ಆರ್ಜಿ ಗ್ರಾಮ ಪಂಚಾಯಿತಿ ಸದಸ್ಯ ಉಪೇಂದ್ರ, ಕೆ.ಟಿ. ಬಷೀರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ. ಮಣಿ, ಬೇಟೋಳಿ ಶಾಲೆಯ ಮುಖ್ಯ ಶಿಕ್ಷಕಿ ಸೀತಾ, ಅಮ್ಮತ್ತಿ ಒಂಟಿಯAಗಡಿ ಕ್ಲಸ್ಟರ್‌ನ ಶು಼ಷಾ, ನಿವೃತ್ತ ಮುಖ್ಯ ಶಿಕ್ಷಕಿ ವಾರಿಜಾ ಬಾಯಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತಾ, ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ತಮ್ಮಯ್ಯ, ಕಲ್ತೋಡು ಕ್ಲಸ್ಟರ್‌ನ ಸಿಆರ್‌ಪಿ ವಿ.ಟಿ. ವೆಂಕಟೇಶ್, ಬಿಆರ್‌ಪಿ ಗೀತಾಂಜಲಿ, ಸರಕಾರಿ ನೌಕರರ ಸಂಘದ ನಿರ್ದೇಶಕ ಮಂಜುನಾಥ್ ಹಾಜರಿದ್ದರು.