ಮಡಿಕೇರಿ, ಸೆ. ೨೪: ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ತಾ. ೨೭ ರಂದು ಸಾಧನೆ ಮಾಡಿದ ಶಿಕ್ಷಕರಿಗೆ ನೇಷನ್ ಬಿಲ್ಡರ್ಸ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ. ವಸಂತ್ಕುಮಾರ್ ತಿಳಿಸಿದ್ದಾರೆ.
ನಗರದ ರೋಟರಿ ಸಭಾಂಗಣದಲ್ಲಿ ಅಂದು ಸಂಜೆ ೬.೩೦ ಗಂಟೆಗೆ ಆಯೋಜಿತ ಕಾರ್ಯಕ್ರಮದಲ್ಲಿ ಸಾಧಕ ಶಿಕ್ಷಕರನ್ನು ಕೂಡಿಗೆ ಕ್ರೀಡಾಶಾಲೆಯ ನಿವೃತ್ತ ಪ್ರಾಂಶುಪಾಲರಾದ ಕುಂತಿ ಬೋಪಯ್ಯ ಸನ್ಮಾನಿಸಲಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಬೊಯಿಕೇರಿ ಶಾಲೆಯ ಬಿ.ಟಿ. ಪೂರ್ಣೇಶ್, ಮೂರ್ನಾಡು ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವಿ.ಕೆ.ಲಲಿತಾ, ಭಾಗಮಂಡಲ ಕಾವೇರಿ ಕಾಲೇಜಿನ ಪ್ರಾಂಶುಪಾಲ ಕೆ.ಜೆ. ದಿವಾಕರ್, ಮೂರ್ನಾಡು ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಎ.ಜಿ.ಗಣೇಶ್, ಮಡಿಕೇರಿಯ ನಿವೃತ್ತ ಶಿಕ್ಷಕಿ ಕಸ್ತೂರಿ ಗೋವಿಂದಮ್ಮಯ್ಯ ಅವರನ್ನು ಸನ್ಮಾನಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ರೋಟರಿ ವಲಯ ಸಹಾಯಕ ಗವರ್ನರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್, ರೋಟರಿ ವುಡ್ಸ್ ಕಾರ್ಯದರ್ಶಿ ಹರೀಶ್ ಕಿಗ್ಗಾಲು ಹಾಜರಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.