ಕುಶಾಲನಗರ, ಏ. ೧೮: ಈ ಬಾರಿಯ ಚುನಾವಣೆ ಜಾತಿ ಆಧಾರಿತ ಚುನಾವಣೆ ಅಲ್ಲ. ದೇಶದ ಭದ್ರತೆ ಅಭಿವೃದ್ಧಿ ನಡುವೆ ಜನಪರ ಸರಕಾರಕ್ಕಾಗಿ ನಡೆಯುತ್ತಿರುವ ಚುನಾವಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಪ್ರತಿಪಾದಿಸಿದರು.

ಕುಶಾಲನಗರದ ಗೌಡ ಸಮಾಜ ಆವರಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕೊಡಗು ಜಿಲ್ಲೆಯ ಪ್ರತಿಯೊಬ್ಬರೂ ಸ್ವಾಭಿಮಾನಿಗಳು. ಯಾರೇ ಏನೇ ಹೇಳಿದರೂ ತಮ್ಮ ನಿರ್ಧಾರವನ್ನು ಬದಲಾಯಿಸುವ ಮಟ್ಟಕ್ಕೆ ಇಳಿಯುವುದಿಲ್ಲ ಎಂದು ಹೇಳಿದರು.

‘ಇಂಡಿಯಾ’ ಒಕ್ಕೂಟದ ಮೂಲಕ ಕಾಂಗ್ರೆಸ್ ದೇಶದ ೨೦೦ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್ ಕೇಂದ್ರದಲ್ಲಿ ಸರ್ಕಾರ ರಚಿಸುತ್ತೇವೆ ಎನ್ನುವುದು ಹಾಸ್ಯಾಸ್ಪದ. ಮೈತ್ರಿ ಪಕ್ಷದ ನಾಯಕರು ಪ್ರತಿಯೊಬ್ಬರೂ ನಾವೇ ಪ್ರಧಾನಿ ಅಭ್ಯರ್ಥಿ ಎನ್ನುತ್ತಿರುವುದು ಎಲ್ಲೆಡೆ ಕೇಳಿ ಬರುತ್ತಿದೆ ಎಂದರು.

ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆ ಸರಕಾರದ ಖಜಾನೆ ಖಾಲಿಯಾಗುವ ಸಂದರ್ಭ ಬಂದ್ ಆಗುತ್ತೆ ಎಂದು ಹೇಳಿದ ಸದಾನಂದ ಗೌಡರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರದ್ದು ನಿರಂತರ ಹಾಗೂ ಶಾಶ್ವತ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ವಿದ್ಯಾರಣ್ಯಪುರ ದಲ್ಲಿ ರಾಮನ ವಿಷಯಕ್ಕೆ ನಡೆದ ಹಲ್ಲೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಗೌಡರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭ ಈ ರೀತಿಯ ಘಟನೆ ನಡೆಯುತ್ತಿರುವುದು ಸಾಮಾನ್ಯವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭಯೋತ್ಪಾದಕರಿಗೆ, ಕಾನೂನು

(ಮೊದಲ ಪುಟದಿಂದ) ಕೈಗೆತ್ತಿಕೊಳ್ಳುವವರಿಗೆ ಕಾಂಗ್ರೆಸ್ ಕಾಲಘಟ್ಟ ಸ್ವರ್ಗಮಯವಾಗಿದೆ ಎಂದರು.

ಜೆಡಿಎಸ್ ವರಿಷ್ಠರಾದ ದೇವೇಗೌಡ ಅವರು ದೇಶದಲ್ಲಿ ಮತ್ತೆ ಭ್ರಷ್ಟಾಚಾರ ರಹಿತ ಆಡಳಿತ ಮುಂದುವರೆಯಬೇಕು ಎನ್ನುವ ದೃಷ್ಟಿಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದಾಗಿ ಅವರು ತಿಳಿಸಿದರು.

ಎನ್‌ಡಿಎ ಮೈತ್ರಿಕೂಟದ ೨೮ ಸ್ಥಾನಗಳು ರಾಜ್ಯದಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಅಪಪ್ರಚಾರದ ಆಧಾರದಲ್ಲಿ ಗೆಲುವಿಗೆ ಶತ ಪ್ರಯತ್ನ ಮಾಡುತ್ತಿದೆ ಎಂದು ಅವರು ಹೇಳಿದರು.

ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯ ಸರ್ಕಾರ ಜನವಿರೋಧಿ, ರೈತ ವಿರೋಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಕೊಡಗು ಜಿಲ್ಲೆಯಲ್ಲಿ ಅಭಿವೃದ್ಧಿಗೆ ಇನ್ನೂ ಯಾವುದೇ ರೀತಿಯ ಅನುದಾನ ಬಿಡುಗಡೆಯಾಗಿಲ್ಲ. ಬಿಜೆಪಿ ಅವಧಿಯ ಕಾಮಗಾರಿಗಳನ್ನು ತನ್ನದೆಂದು ಹೇಳಿಕೊಂಡು ಜನರಿಗೆ ಸುಳ್ಳು ಮಾಹಿತಿ ನೀಡುತ್ತಿದೆ. ಗ್ರಾಮೀಣ ಹಾಗೂ ಪಟ್ಟಣದ ಜನತೆಗೆ ಕೇಂದ್ರ ಸರ್ಕಾರದ ಹಲವು ಯೋಜನೆಗಳು ನಿರಂತರವಾಗಿ ಬರುತ್ತಿದ್ದು ಮತ್ತೊಮ್ಮೆ ಮೋದಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ಕಾಂಗ್ರೆಸ್ ಜಾತಿ ಒಡೆಯುವ ಕೆಲಸ ಮಾಡುತ್ತಿದೆ. ಜಾತಿಯ ವಿಷ ಬೀಜ ಬಿತ್ತುತ್ತಿದ್ದು ಈ ಮೂಲಕ ಮತಗಳನ್ನು ಒಡೆಯುವ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿದರು.

ಜೆಡಿಎಸ್- ಬಿಜೆಪಿ ಕೋರ್ ಕಮಿಟಿ ಸದಸ್ಯ ಸಿ.ಎಲ್. ವಿಶ್ವ ಮಾತನಾಡಿ, ಈ ಚುನಾವಣೆಯಲ್ಲಿ ಜಾತಿ ರಾಜಕಾರಣ ನಡೆಯಲು ಅಸಾಧ್ಯ. ರೈತರ ಸಂಕಷ್ಟಕ್ಕೆ ಕೇಂದ್ರ ಹಲವು ಯೋಜನೆಯನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಮೋದಿ ಅವರ ನಾಯಕತ್ವಕ್ಕೆ ಪ್ರಾಮಾಣಿಕವಾಗಿ ಬೆಂಬಲ ನೀಡುವುದಾಗಿ ಘೋಷಿಸಿದರು. ಕುಶಾಲನಗರ ಅಧ್ಯಕ್ಷ ಎಂ. ಚರಣ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ತಾಲೂಕು ಅಧ್ಯಕ್ಷ ಗೌತಮ್, ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಜಿ.ಪಂ. ಮಾಜಿ ಸದಸ್ಯೆ ಮಂಜುಳಾ, ಜೆಡಿಎಸ್ ಪ್ರಮುಖರಾದ ರಾಮಣ್ಣ ಚಂದ್ರು ವಸಂತ್, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಗೌಡ ಸಮಾಜದ ಪ್ರಮುಖರು ಇದ್ದರು.