ವೀರಾಜಪೇಟೆ, ಏ. ೨೫: ಹಣದಿಂದ ಜೀವ ಉಳಿಸಲು ಸಾಧ್ಯವಿಲ್ಲ. ರಕ್ತದಾನದಿಂದ ಮಾತ್ರ ಜೀವವನ್ನು ಉಳಿಸಲು ಸಾಧ್ಯ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆ ಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು.

ಸೆಂಟ್ ಆನ್ಸ್ ಪದವಿ ಕಾಲೇಜಿ ನಲ್ಲಿ ಯುವ ರೆಡ್‌ಕ್ರಾಸ್ ಘಟಕ, ಎನ್.ಎಸ್.ಎಸ್. ಘಟಕಗಳು ಮೈಸೂರಿನ ಸಂತ ಜೋಸೆಫರ ಆಸ್ಪತ್ರೆಯ ಸಹಯೋಗದಲ್ಲಿ ಕಾಲೇಜಿ ನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾನವನ ಜೀವನ ಸ್ವಾರ್ಥ ರಹಿತವಾಗಿರಬೇಕು. ಪ್ರತಿಯೊಬ್ಬರು ರಕ್ತದ ಮಾಲೀಕ ರಾಗಿದ್ದು ಅದರ ಜೊತೆಯಲ್ಲಿ ರಕ್ತದಾನಿಗಳು ಆಗಬೇಕೆಂದರು.

ಮೈಸೂರಿನ ಸಂತ ಜೋಸೆಫರ ಆಸ್ಪತ್ರೆಯ ಬ್ಲಡ್‌ಬ್ಯಾಂಕ್ ಘಟಕದ ಅಧಿಕಾರಿ ಮೊಹಮ್ಮದ್ ಇಬ್ರಾಹಿಂ ವಿದ್ಯಾರ್ಥಿಗಳಿಗೆ ರಕ್ತದಾನದ ಮಹತ್ವ ವನ್ನು ವಿವರಿಸಿದರು. ರಕ್ತದಾನ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ರಕ್ತದಾನವು ಸರ್ವ ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು, ವಿದ್ಯಾರ್ಥಿಗಳು ಅದರ ಮಹತ್ವವನ್ನು ಅರಿಯಬೇಕು ಎಂದರು.

ಸಂತ ಜೋಸೆಫರ ಆಸ್ಪತ್ರೆಯ ವತಿಯಿಂದ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಮತ್ತು ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ದಲ್ಲಿ ಸಂತ ಅನ್ನಮ್ಮ ಚರ್ಚ್ನ ಸಹಾಯಕ ಗುರುಗಳಾದ ಫಾ. ಚಾರ್ಲ್ಸ್, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ಉಪನ್ಯಾಸ ಕರು ವಿದ್ಯಾರ್ಥಿಗಳು ಉಪಸ್ಥಿತರಿ ದ್ದರು.