ವೀರಾಜಪೇಟೆ, ಫೆ. ೨೦: ಕೇಂದ್ರ ಸರ್ಕಾರ ೧೩ನೇ ಲೋಕಸಭೆಯಲ್ಲಿ ಮಂಡಿಸಲು ಉದ್ದೇಶಿಸಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಈ ಮಸೂದೆ ಪಕ್ಷಪಾತದಿಂದ ಕೂಡಿದ್ದು, ಅಸಂವಿಧಾನಿಕ ಮತ್ತು ಮುಸ್ಲಿಂ ವಿರೋಧಿಯಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ. ಹನೀಫ್ ದೂರಿದ್ದಾರೆ.
ಈ ಕುರಿತು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಸಂಘಟನೆಗಳ, ಜನಪ್ರತಿನಿಧಿಗಳ ಅಭಿಪ್ರಾಯವನ್ನು ಪರಿಗಣಿಸದೇ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದೆ. ಆದ್ದರಿಂದ ಕೇಂದ್ರದ ಈ ಅಸಂವಿಧಾನಿಕ ನಡೆಯ ವಿರುದ್ಧ ಪ್ರಜ್ಞಾವಂತರು ಪಕ್ಷಾತೀತವಾಗಿ ಮತ್ತು ಜಾತ್ಯತೀತವಾಗಿ ಧ್ವನಿ ಎತ್ತಬೇಕು ಎಂದು ಕರೆ ನೀಡಿದರು.
ವಕ್ಫ್ ಆಸ್ತಿಗಳ ಉತ್ತಮ ನಿರ್ವಹಣೆ ಮತ್ತು ಆಡಳಿತದ ಉದ್ದೇಶದಿಂದ ಅಂದಿನ ಕೇಂದ್ರ ಸರ್ಕಾರ ೧೯೯೫ರಲ್ಲಿ ವಕ್ಫ್ ಕಾಯ್ದೆಯನ್ನು ಜಾರಿಗೆ ತಂದಿತ್ತು. ನಂತರದಲ್ಲಿ ಈ ಕಾಯ್ದೆ ಅಷ್ಟೊಂದು ಪರಿಣಾಮಕಾರಿಯಾಗಿಲ್ಲ ಎಂಬ ಅಭಿಪ್ರಾಯ ಬಂದಿದ್ದರಿAದ ನ್ಯಾಯಮೂರ್ತಿ (ನಿವೃತ್ತ) ರಾಜೀಂದರ್ ಸಾಚಾರ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸುಗಳು ಮತ್ತು ವಕ್ಫ್ ಮತ್ತು ಕೇಂದ್ರ ವಕ್ಫ್ ಮಂಡಳಿಗೆ ಸಂಬAಧಿಸಿದ ಜಂಟಿ ಸಂಸದೀಯ ಸಮಿತಿಯ ವರದಿಗಳ ಆಧಾರದಲ್ಲಿ ಮತ್ತು ಸಂಬAಧಿಸಿದ ಪಾಲುದಾರರೊಂದಿಗೆ ವಿಸ್ತೃತ ಚರ್ಚೆ ನಡೆಸಿದ ನಂತರ ೨೦೧೩ರಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಬಳಿಕ ಅಂದು ಅಂಗೀಕಾರಗೊAಡ ಈ ಕಾಯ್ದೆಯನ್ನು ಯಥಾವತ್ತಾಗಿ ಮುಂದುವರಿಸಬೇಕಿತ್ತು ಎಂದು ವಿವರಿಸಿದ ಹನೀಫ್, ಕೇಂದ್ರ ಸರ್ಕಾರದ ಉದ್ದೇಶಿತ ನೂತನ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದರೆ ಅದು ಸಂವಿಧಾನ ಬಾಹಿರವಾಗುತ್ತದೆ.
ವಕ್ಫ್ ಆಸ್ತಿ ವಶಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಹುನ್ನಾರ ಮಾಡಿದ್ದು, ತಿದ್ದುಪಡಿ ಕಾಯ್ದೆಯಲ್ಲಿ ಜಿಲ್ಲಾಧಿಕಾರಿಗಳಿಗೆ ನ್ಯಾಯಾಂಗದ ಅಧಿಕಾರ ನೀಡಿರುವುದು ಅನ್ಯಾಯ ಮತ್ತು ಸಂವಿಧಾನ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಘಟಕದ ಉಪಾಧ್ಯಕ್ಷ ಎಂ.ಎA. ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಕೆ.ಎಂ. ಸೈಯದ್ ಭಾವ, ವಿವಿಧ ಬ್ಲಾಕ್ ಘಟಕದ ಅಧ್ಯಕ್ಷರಾದ ಅಕ್ಮಲ್ ಪಾಷಾ, ಕೋಳುಮಂಡ ರಫೀಕ್, ಸಿ.ಎ. ಜುನೈದ್ ಉಪಸ್ಥಿತರಿದ್ದರು.