ನವದೆಹಲಿ, ಮಾ. ೧೩: ಸಂಸತ್ ಅಧಿವೇಶನದ ಬುಧವಾರದ ಕಲಾಪದಲ್ಲಿ ಮೈಸೂರು-ಕೊಡಗು ಸಂಸದರಾದ ಯದುವೀರ್ ಒಡೆಯರ್ ಮಾತೃಭಾಷೆಯಲ್ಲಿ ಭಾಷಣ ಮಾಡಿ ಗಮನ ಸೆಳೆದರು. ಚರ್ಚೆಯಲ್ಲಿ ವಿಷಯ ಮಂಡನೆಗೂ ಮುನ್ನ ಮಾತನಾಡಿದ ಯದುವೀರ್, ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ವಿಷಯ ಮಂಡಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಅಭಾರಿಯಾಗಿದ್ದೇನೆ. ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ಧಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳೆ ಕೆಸರೆ ಗ್ರಾಮದಲ್ಲಿ ಅವೈಜ್ಞಾನಿಕ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಯದುವೀರ್ ಒಡೆಯರ್ ಸಂಸತ್ತಿನ ಅಧಿವೇಶನದಲ್ಲಿ ಗಮನ ಸೆಳೆದರು. ನನ್ನ ಕ್ಷೇತ್ರ ವ್ಯಾಪ್ತಿಯ ಹಳೆ ಕೆಸರೆ ಗ್ರಾಮದಲ್ಲಿ ಘನತ್ಯಾಜ್ಯ ಘಟಕ ನಿರ್ಮಾಣದ ವೇಳೆ ಕಾನೂನು ರೀತಿ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ನೀತಿ-ನಿಯಮಗಳನ್ನು ಪಾಲಿಸಿಲ್ಲ ಎಂದು ಮಾಹಿತಿ ನೀಡಿದರು. ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಶಾಸನಬದ್ಧ ಅನುಮತಿಗಳನ್ನು ಪಡೆಯದೇ ನಿರ್ಮಾಣ ಮಾಡಲಾಗಿದೆ. ಅವೈಜ್ಞಾನಿಕವಾಗಿ ನಿರ್ವಹಣಾ ಘಟಕವನ್ನು ಸ್ಥಾಪಿರುವುದರಿಂದ ಕೊಳೆತ ದುರ್ವಾಸನೆ ಹೊರಹೊಮ್ಮುತ್ತಿದೆ. ಘನ ತ್ಯಾಜ್ಯದಿಂದ ಪರಿಸರದ ಮೇಲೆ ಭಾರೀ ಪರಿಣಾಮ ಬೀರಿದೆ. ಇದರಿಂದ ಸುತ್ತಮುತ್ತಲ ಗ್ರಾಮದ ನಿವಾಸಿಗಳು ನಿರಂತರ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಸಂಸದರು ವಿವರಿಸಿದರು. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನೂ ಪಾಲಿಸಿಲ್ಲ ಎಂದು ಸಂಸದರು ಸದನಕ್ಕೆ ತಿಳಿಸಿದರು. ಈ ಪ್ರದೇಶದ ಬಳಿಯೇ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ ಜಾಗವಿದ್ದು, ಇಲ್ಲಿಯೂ ಅವೈಜ್ಞಾನಿಕವಾಗಿ ತ್ಯಾಜ್ಯವನ್ನು ಸುಡುವುದು ಹೆಚ್ಚಾಗಿದೆ. ಇದರಿಂದ ಹೊರಹೊಮ್ಮುತ್ತಿರುವ ಹೊಗೆ ಹಾಗೂ ವಾಸನೆಯಿಂದ ಜನರಿಗೆ ತೊಂದರೆಯಾಗಿದೆ. ಈ ಬಗ್ಗೆ ಜನರು ಪ್ರತಿಭಟನೆ ನಡೆಸಿ, ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರೂ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಸಂಸದರು ತಿಳಿಸಿದರು. ಈ ಅವೈಜ್ಞಾನಿಕ ಘಟಕಗಳನ್ನು ಕೂಡಲೇ ತೆರವುಗೊಳಿಸಬೇಕು. ನಮ್ಮ ಕ್ಷೇತ್ರ ವ್ಯಾಪ್ತಿಯ ಸಾವಿರಾರು ಜನರ ಆರೋಗ್ಯ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ಮನವಿ ಮಾಡುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. -ನ್ಯೂಸ್ ಡೆಸ್ಕ್