ಮಡಿಕೇರಿ, ಏ. ೩೦: ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವದ ಮಹಾನ್ ಮಾನವತಾವಾದಿ ಬಸವೇಶ್ವರರು ೧೨ ನೇ ಶತಮಾನದಲ್ಲಿಯೇ ನಾಡಿನಲ್ಲಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು. ಆದರೆ ರಾಷ್ಟçಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷವಾದರೂ ಎಲ್ಲರೂ ಸಮಾನವಾಗಿ ಬದುಕು ಕಟ್ಟಿಕೊಂಡಿದ್ದಾರೆಯೇ ಎಂಬ ಬಗ್ಗೆ ಆತ್ಮ ವಿಮರ್ಶೆ ಆಗಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಇಂದಿಗೂ ಸಹ ಬಡವರು ಮತ್ತಷ್ಟು ಕಡು ಬಡವರಾಗಿ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿ ಬದುಕು ನಡೆಸುತ್ತಿದ್ದಾರೆ. ಆದರೆ ಬಸವಣ್ಣ ಅವರ ಆಶಯ ಈಡೇರಿದೆಯೇ ಎಂಬುದನ್ನು ಪ್ರತಿಯೊಬ್ಬರೂ ಚಿಂತಿಸಬೇಕು ಎಂದು ಡಾ.ಮಂತರ್ ಗೌಡ ನುಡಿದರು.
೧೨ನೇ ಶತಮಾನದಲ್ಲಿ ಬಸವೇಶ್ವರರು ಸಮ ಸಮಾಜ ನಿರ್ಮಾಣಕ್ಕೆ ಎಲ್ಲರನ್ನೂ ಒಟ್ಟುಗೂಡಿಸಿ ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಿದರು. ಆದರೆ ಸಮಾನತೆ ಇನ್ನೂ ತಲುಪಲಿಲ್ಲ, ಸಮಾನರಾಗಿ ಬದುಕುತ್ತಿದ್ದೇವೆ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.
ಸೋಮವಾರಪೇಟೆಯಲ್ಲಿ ಬಸವೇಶ್ವರರ ಪ್ರತಿಮೆ ಇದೆ. ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸುತ್ತೂರು ಶ್ರೀಗಳು ಹಾಗೂ ತುಮಕೂರು ಶ್ರೀಗಳನ್ನು ಆಹ್ವಾನಿಸಿ ಬಸವ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಶಾಸಕರು ಇದೇ ಸಂದರ್ಭ ತಿಳಿಸಿದರು.
ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ ಬಸವೇಶ್ವರರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಬಸವೇಶ್ವರ ವಚನ ಸಂದೇಶಗಳನ್ನು ತಿಳಿದುಕೊಂಡು, ಅದನ್ನು ಪಾಲಿಸುವಂತಾಗಬೇಕು ಎಂದರು.
ಕುಶಾಲನಗರದಲ್ಲಿ ಬಸವ ಬಳಗದ ಜಾಗ ಇದ್ದು, "ಬಸವ ಭವನ" ನಿರ್ಮಾಣಕ್ಕೆ ಅಗತ್ಯ ಸಹಕಾರಕ್ಕೆ ಶಾಸಕರಲ್ಲಿ ಮನವಿ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಬಸವೇಶ್ವರರು ೧೨ ನೇ ಶತಮಾನದಲ್ಲಿ ಅನುಭವ ಮಂಟಪ ಮೂಲಕ ಪ್ರತಿಯೊಬ್ಬರೂ ಸಮಾನರು ಎಂಬ ಸಂದೇಶ ಸಾರಿದರು. ಸ್ತಿçÃಯರಿಗೆ ಸಮಾನ ಅವಕಾಶ ಕಲ್ಪಿಸಿದರು ಎಂದು ತಿಳಿಸಿದರು.
ಸೋಮವಾರಪೇಟೆ ವಿರಕ್ತ ಮಠದ ನಿಶ್ಚಲಾನಂದ. ಸ್ವಾಮೀಜಿ ಮಾತನಾಡಿ, ಬಸವಣ್ಣನವರ ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದರು.
ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಮೂರ್ತಿ ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ 'ಬಸವ ಭವನ' ನಿರ್ಮಾಣಕ್ಕೆ ಜಿಲ್ಲಾಡಳಿತದ ವತಿಯಿಂದ ಜಾಗ ಒದಗಿಸುವಂತಾಗಬೇಕು ಎಂದು ಕೋರಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಅಧ್ಯಕ್ಷ ಶಿವಪ್ಪ ಮಾತನಾಡಿ, ಬಸವೇಶ್ವರರ ವಚನಗಳು ಹಾಗೂ ಸಂದೇಶಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಜೊತೆಗೆ ಅದರಂತೆ ನಡೆದುಕೊಳ್ಳಬೇಕು ಎಂದರು.
ಷಷ್ಠಿ ವಚನ ಗಾಯನ ಹಾಡಿದರು, ವಿಜಯಲಕ್ಷಿö್ಮ ಶರಣರ ವಚನ ವಾಚಿಸಿದರು.
ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ವೀರಶೈವ ಲಿಂಗಾಯತ ಸಮಾಜದ ಪ್ರಧಾನ ಕಾರ್ಯದರ್ಶಿ ಶಂಭಾ ಶಿವಮೂರ್ತಿ, ತಾಲೂಕು ಘಟಕದ ಅಧ್ಯಕ್ಷ ರುದ್ರಪ್ರಸನ್ನ, ಆದಿ, ಟಿ.ಜಿ. ಪ್ರೇಮಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ. ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ನಿವೃತ್ತ ಶಿಕ್ಷಕರಾದ ಬಿ.ಸಿ. ಶಂಕರಯ್ಯ, ಇತರರು ಇದ್ದರು.