ಸೋಮವಾರಪೇಟೆ, ಮೇ ೨೨: ಸಮೀಪದ ತೋಳೂರು-ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಇನಕನಹಳ್ಳಿ ಗ್ರಾಮದ ನೇತಾಜಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಸ್ಥಳೀಯ ಮಟ್ಟದ ಅಧಿಕಾರಿಗಳು ಯಾವುದೇ ಸ್ಪಂದನ ನೀಡುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆರೋಪಿಸಿ, ತಾ.ಪಂ.ಗೆ ಮನವಿ ಸಲ್ಲಿಸಿದ ಹಿನ್ನೆಲೆ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು.

ಕುಡಿಯುವ ನೀರಿಗೆ ಕಳೆದ ೨೫ ದಿನಗಳಿಂದಲೂ ಸಮಸ್ಯೆಯಾಗಿದ್ದು, ಬಡ ಕೂಲಿ ಕಾರ್ಮಿಕ ಕುಟುಂಬಗಳು ತೀವ್ರ ತೊಂದರೆ ಅನುಭವಿಸುತ್ತಿವೆ.

ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ರಸ್ತೆ ಕಾಮಗಾರಿಯ ಕುಂಟುನೆಪ ಹೇಳಿಕೊಂಡು ಕೈಚೆಲ್ಲಿ ಕುಳಿತಿದ್ದಾರೆ ಎಂದು ರಕ್ಷಣಾ ವೇದಿಕೆಯ ಪ್ರಮುಖರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅವರಿಗೆ ದೂರು ನೀಡಿದರು.

ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಸುಮಾರು ೨೫ ದಿನಗಳಿಂದ ಗ್ರಾಮಸ್ಥರೇ ಸ್ವತಃ ಖಾಸಗಿ ವಾಹನಗಳಲ್ಲಿ ದಿನಕ್ಕೆ ಐದುನೂರು ರೂಪಾಯಿ ವ್ಯಯಿಸಿ ಕುಡಿಯುವ ನೀರು ತಂದುಕೊಳ್ಳುವ ದುಸ್ಥಿತಿ ನಿರ್ಮಾಣವಾಗಿದ್ದು ಸಂಪೂರ್ಣ ಕೂಲಿ ಕಾರ್ಮಿಕರೆ ಇರುವ ಗ್ರಾಮಕ್ಕೆ ನೀರು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ದೀಪಕ್ ಗಮನ ಸೆಳೆದರು. ಸಮಸ್ಯೆಯ ಗಂಭೀರತೆಯನ್ನು ಅರಿತ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅವರು, ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ತಕ್ಷಣ ಸಮಸ್ಯೆಯನ್ನು ಬಗೆಹರಿಸಲು ಕ್ರಮ ವಹಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದರು. ಇದರೊಂದಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಇಲಾಖೆಯ ಅಭಿಯಂತರ ರನ್ನು ತರಾಟೆಗೆ ತೆಗೆದುಕೊಂಡು, ತಕ್ಷಣ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ತಾಕೀತು ಮಾಡಿದರು.

ಈ ಸಂದರ್ಭ ಸಂಘಟನೆಯ ತಾಲೂಕು ಅಧ್ಯಕ್ಷ ರೋಹಿತ್ ಗೌಡ, ಉಪಾಧ್ಯಕ್ಷ ಶಿವು, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ರವೀಶ್ ಕಲ್ಕಂದೂರು, ಇನಕನಹಳ್ಳಿ ಶಿವಪ್ಪ, ಸೀಮಂತ್, ಮನೋಹರ, ಪುನೀತ್, ಹರೀಶ್ ಸೇರಿದಂತೆ ಇತರರು ಇದ್ದರು.