ಪೊನ್ನಂಪೇಟೆ, ಮೇ. ೨೪: ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೈಸೊಡ್ಲೂರು ಗ್ರಾಮದ ಕಲ್ಲುಮೊಟ್ಟೆ ಎಂಬಲ್ಲಿ ಹೊಟ್ಟೆಂಗಡ ರತೀಶ್ ಎಂಬುವರು ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ತಾ. ೨೩ ರಂದು ಸಂಜೆ ೪ ಗಂಟೆ ಸಮಯದಲ್ಲಿ ಹುಲಿ ದಾಳಿ ಮಾಡಿ ಕೊಂದು ಹಾಕಿರುವ ಘಟನೆ ನಡೆದಿದೆ.
ವಿಷಯ ತಿಳಿದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಹಸುವಿನ ಮಾಲೀಕರೊಂದಿಗೆ ಚರ್ಚಿಸಿ, ತಾ. ೨೪ ರಂದು ಬೆಳಗ್ಗೆಯಿಂದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.
ಸಂಕೇತ್ ಪೂವಯ್ಯ ಭೇಟಿ
ಘಟನಾ ಸ್ಥಳಕ್ಕೆ ಆಗಮಿಸಿದ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರ ಬಳಿ ಹಸುವಿನ ಮಾಲೀಕರಿಗೆ ಕೂಡಲೆ ಸರಕಾರದಿಂದ ಅಗತ್ಯ ಪರಿಹಾರ ಕೊಡಿಸುವಂತೆ ಹಾಗೂ ಹುಲಿಯ ಚಲನವಲನಗಳನ್ನು ಕಂಡು ಹಿಡಿಯಲು ಸಿ.ಸಿ ಕ್ಯಾಮರಾ ಅಳವಡಿಕೆಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಪಟ್ಟು ಹಿಡಿದರು. ಈ ಸಂದರ್ಭ ರೈತ ಸಂಘದ ಮುಖಂಡರು, ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿ ದಾಳಿ ಮಾಡಿ ಕೊಂದು ಹಾಕಿರುವ ಹಸುವಿಗೆ ಬದಲಾಗಿ ಮತ್ತೊಂದು ಹಸುವನ್ನು ಕೂಡಲೇ ಕೊಡಿಸಬೇಕು. ೫ ದಿನಗಳಲ್ಲಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದರು. ತಪ್ಪಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಈ ಸಂದರ್ಭ ಸಂಕೇತ್ ಪೂವಯ್ಯ ಅವರು, ರೈತರು ಪ್ರತಿಭಟನೆಯನ್ನು ಕೈಬಿಡುವಂತೆ ಮನವೊಲಿಸಿದರು. ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿರುವ ಘಟನೆಗೆ ಸಂಬAಧಿಸಿದAತೆ ಅರಣ್ಯ ಇಲಾಖೆಯವರು ಸ್ಥಳದಲ್ಲಿ ಕ್ಯಾಮರಾ ಅಳವಡಿಸಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ಅವರು ಎರಡು ಹುಲಿಗಳನ್ನು ಸೆರೆ ಹಿಡಿದು ಪುನರ್ವಸತಿ ಕಲ್ಪಿಸಲು ಅನುಮತಿ ದೊರಕಿಸಿದ್ದು, ಅದರಂತೆ ಅರಣ್ಯ ಇಲಾಖೆ ವೈಜ್ಞಾನಿಕ ಕಾರ್ಯಾಚರಣೆ ನಡೆಸುತ್ತಿದ್ದು ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಕರ್ನಾಟಕ ರಾಜ್ಯ ರೈತ ಸಂಘದ ಶ್ರೀಮಂಗಲ ಹೋಬಳಿ ಘಟಕದ ಅಧ್ಯಕ್ಷ ಚಟ್ಟಂಗಡ ಕಂಬ ಕಾರ್ಯಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ಹುಲಿ ದಾಳಿ ನಡೆಸುತ್ತಿದ್ದು, ಅರಣ್ಯ ಇಲಾಖೆಯಿಂದ ಯಾವುದೇ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ. ಅರಣ್ಯ ಇಲಾಖೆಯವರು ಕೇವಲ ಆಶ್ವಾಸನೆ ನೀಡುತ್ತಿದ್ದಾರೆಯೇ ಹೊರತು, ಯಾವುದೇ ಶಾಶ್ವತ ಪರಿಹಾರ ಕೈಗೊಂಡಿಲ್ಲ. ಮುಂದಿನ ೧೦ ದಿನಗಳಲ್ಲಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿದು, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಎಸಿಎಫ್ ಗೋಪಾಲ್ ಮಾತನಾಡಿ ತಾ. ೨೩ ರಂದು ಸಂಜೆ ಸಮಯದಲ್ಲಿ ಬೆಳ್ಳೂರು ಮತ್ತು ಹೈಸೊಡ್ಲೂರು ವ್ಯಾಪ್ತಿಯಲ್ಲಿ ಹುಲಿ ದಾಳಿ ಮಾಡಿ ಎರಡು ಹಸುಗಳನ್ನು ಕೊಂದು ಹಾಕಿದ್ದು, ಮಾಹಿತಿ ತಿಳಿದ ಮೇರೆಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಕ್ಯಾಮರಾ ಅಳವಡಿಸಿ ಹುಲಿಯ ಚಲನವಲನ ಪತ್ತೆ ಹಚ್ಚಿ ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಮಾಡಲಾಗುವುದು ಎಂದರು.
ಈ ಸಂದರ್ಭ ವೀರಾಜಪೇಟೆ ತಾಲೂಕು ರೈತ ಸಂಘದ ಅಧ್ಯಕ್ಷ ಬಾಚಿಮಾಡ ಭವಿ ಕುಮಾರ್, ಹುದಿಕೇರಿ ಹೋಬಳಿ ರೈತ ಸಂಘದ ಅಧ್ಯಕ್ಷ ಬಲ್ಯಮೀದೆರೀರ ಪ್ರಕಾಶ್, ಪೊನ್ನಂಪೇಟೆ ತಾಲೂಕು ಕಾಂಗ್ರೆಸ್ ವಲಯ ಅಧ್ಯಕ್ಷ ಮೀದೇರೀರ ನವೀನ್, ಚಂಗುಲAಡ ಸೂರಜ್, ಮಾದೀರ ಅಜಿತ್, ಮಂಡAಗಡ ಯೋಗೇಶ್, ವೀಟು, ರೈತ ಸಂಘದ ಸದಸ್ಯರು, ಹೊಟ್ಟೆಂಗಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು, ಪೊನ್ನಂಪೇಟೆ ವಲಯ ಅರಣ್ಯಾಧಿಕಾರಿ ಬಿ. ಎಂ ಶಂಕರ್, ಉಪವಲಯ ಅರಣ್ಯಾಧಿಕಾರಿಗಳಾದ ದಿವಾಕರ್, ನಾಗೇಶ್, ಪೊನ್ನಂಪೇಟೆ, ವೀರಾಜಪೇಟೆ, ತಿತಿಮತಿ ಆರ್ ಆರ್ ಟಿ ಸಿಬ್ಬಂದಿಗಳು, ಹಾಗೂ ಆನೆ ಕಾರ್ಯಪಡೆಯ ಸಿಬ್ಬಂದಿಗಳು ಇದ್ದರು.