ಸೋಮವಾರಪೇಟೆ, ಜೂ. ೨೪: ತಾಲೂಕು ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳು ಮತ್ತು ಸಮಸ್ಯೆಗಳ ನಿವಾರಣೆಗಾಗಿ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಮೂಲಕ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.

ಶಾಸಕರ ಗೃಹ ಕಚೇರಿಯಲ್ಲಿ ಸಮಿತಿಯ ಪ್ರಮುಖರು ಮನವಿ ಸಲ್ಲಿಸಿ, ಬೇಡಿಕೆಗಳನ್ನು ಈಡೇರಿಸುವಂತೆ ಗಮನ ಸೆಳೆದರು. ಪ್ರಮುಖವಾಗಿ ಸೋಮವಾರಪೇಟೆ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ವೈದ್ಯರು, ಸಿಬ್ಬಂದಿ ಹಾಗೂ ಇತರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಒಳಾಂಗಣ ಕ್ರೀಡಾಂಗಣ ನಿರ್ಮಾಣ, ಮಾದಾಪುರವನ್ನು ಹೋಬಳಿ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಬಲ್ ಕಾರ್ ಯೋಜನೆ, ಪಟ್ಟಣದಲ್ಲಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ಶತಮಾನೋತ್ಸವ ಭವನ ಕಾಮಗಾರಿ ಪೂರ್ಣಗೊಳಿಸುವಂತೆ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಇದರೊಂದಿಗೆ ಪಟ್ಟಣ ಪಂಚಾಯಿತಿ ವ್ಯಾಪ್ತಿ ವಿಸ್ತರಣೆ ಸಂಬAಧ ಚೌಡ್ಲು, ಹಾನಗಲ್ಲು, ಬೇಳೂರು, ನೇರುಗಳಲೆ ಗ್ರಾ.ಪಂ. ವ್ಯಾಪ್ತಿಯ ಕೆಲ ಗ್ರಾಮಗಳನ್ನು ಸೋಮವಾರಪೇಟೆ ಯೋಜನಾ ಪ್ರಾಧಿಕಾರಕ್ಕೆ ಒಳಪಡಿಸಲು ಆದೇಶವಾಗಿದ್ದು, ಈಗಾಗಲೇ ಕಾರ್ಯದರ್ಶಿಯನ್ನು ನೇಮಿಸಲಾಗಿದೆ. ಆದರೆ ಇನ್ನಿತರ ಸೌಕರ್ಯಗಳನ್ನು ಒದಗಿಸದೇ ಇರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ಗಮನ ಸೆಳೆದರು.

ಕನ್ವರ್ಷನ್, ೯ ಅಂಡ್ ೧೧, ರಸ್ತೆ ಮಾರ್ಜಿನ್, ಗ್ರಾಮ ಠಾಣಾ ಮತ್ತು ಮೂಲಭೂತ ಸೌಕರ್ಯ, ಕೆಲವು ಕಚೇರಿಗಳಿಂದ ಎನ್‌ಓಸಿ ಪಡೆಯಲು ಸಮಸ್ಯೆಯಾಗಿದೆ. ಈ ಹಿನ್ನೆಲೆ ತುರ್ತು ಗಮನ ಹರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ಗಡಿ ಬಾಣಾವರದಿಂದ ನೆರೆಯ ಅರಕಲಗೂಡು ತಾಲೂಕು ವ್ಯಾಪ್ತಿಗೆ ಒಳಪಡುವ ಜಾಲ್ಸೂರು-ಮಾಗಡಿ ರಾಜ್ಯ ಹೆದ್ದಾರಿಯ ೩೦೦ ಮೀಟರ್‌ವರೆಗಿನ ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸಂಚಾರ ತ್ರಾಸದಾಯಕವಾಗಿದೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ ಎಂದು ಅರುಣ್ ಕೊತ್ನಳ್ಳಿ ಹೇಳಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಅವರು, ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಸಂಬAಧಿಸಿದAತೆ ಈಗಾಗಲೇ ಯೋಜನೆ ರೂಪಿಸಲಾಗಿದೆ. ಯೋಜನಾ ಪ್ರಾಧಿಕಾರದ ಸಮಸ್ಯೆಯನ್ನು ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದು. ಕೆಡಿಪಿ ಸಭೆಯಲ್ಲಿ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು. ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಮಕ್ಕಳ ತಜ್ಞರು, ಮೂಳೆ ತಜ್ಞರ ನೇಮಕಕ್ಕೆ ಚಾಲನೆ ನೀಡಲಾಗುವುದು. ಒಳಾಂಗಣ ಕ್ರೀಡಾಂಗಣ, ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ತರಲಾಗುವುದು. ಬಾಣಾವರ ಗಡಿಯಿಂದ ಬಾಕಿಯಿರುವ ರಸ್ತೆ ದುರಸ್ತಿ ಕಾಮಗಾರಿಯನ್ನು ಮಳೆಗಾಲ ಮುಗಿದ ನಂತರ ಕೈಗೆತ್ತಿಕೊಳ್ಳಲಾಗುವುದು ಎಂದು ಹೋರಾಟ ಸಮಿತಿಯ ಮನವಿಗೆ ಪೂರಕ ಸ್ಪಂದನೆ ನೀಡಿದರು.

ಈ ಸಂದರ್ಭ ಸಮಿತಿಯ ಪದಾಧಿಕಾರಿಗಳಾದ ಜಯರಾಮ್, ಸುಲೈಮಾನ್, ನ.ಲ. ವಿಜಯ ಅವರುಗಳು ಉಪಸ್ಥಿತರಿದ್ದರು.