ಕೂಡಿಗೆ, ಜೂ. ೨೫ : ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯು ಸಂಪೂರ್ಣವಾಗಿ ಭರ್ತಿಯಾಗುವ ಹಂತ ತಲುಪಿರುವ ಹಿನ್ನೆಲೆಯಲ್ಲಿ, ಮತ್ತು ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿರುವುದರಿಂದ, ಅಣೆಕಟ್ಟೆಗೆ ಒಳ ಹರಿವಿನ ಪ್ರಮಾಣವು ಗಂಟೆ ಗಂಟೆಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಭದ್ರತಾ ಹಿತದೃಷ್ಟಿಯಿಂದ ಅಣೆಕಟ್ಟೆಯಿಂದ ನದಿಗೆ ೧೦ ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ.
ಅಣೆಕಟ್ಟೆಯಲ್ಲಿ ಈಗಾಗಲೇ ೨೮೫೨.೫೮. ನೀರಿನ ಸಂಗ್ರಹವಿದ್ದು, ಅಣೆಕಟ್ಟೆಯ ಗರಿಷ್ಠ ಮಟ್ಟ ೨೮೫೯ ಆಗಿರುವ ಹಿನ್ನೆಲೆಯಲ್ಲಿ ಮತ್ತು ದಿನಂಪ್ರತಿ ಒಳ ಹರಿವಿನ ಪ್ರಮಾಣದಲ್ಲಿ ಏರಿಳಿತವಾಗುತ್ತಿರುವ ಹಿನ್ನೆಲೆಯಲ್ಲಿ, ಅಲ್ಲದೆ ಅಣೆಕಟ್ಟೆಗೆ ಒಳ ಹರಿವು ೯ ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದ್ದು ಮುನ್ನೆಚ್ಚರಿಕೆಯ ಕ್ರಮವಾಗಿ ಇಲಾಖೆಯ ನಿಯಮಾನುಸಾರ ನದಿಗೆ ಇಂದು ೧೦ ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಮಳೆಯ ಪ್ರಮಾಣವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಳ ಹರಿವು ಪ್ರಮಾಣದಲ್ಲಿ ಹೆಚ್ಚಳವಾದ ಹಿನ್ನೆಲೆಯಲ್ಲಿ ನದಿಗೆ ಕ್ರೇಸ್ಟ್ ಗೇಟ್ಗಳ ಮೂಲಕ ೮ ಸಾವಿರ ಮತ್ತು ಘಟಕದ ಮೂಲಕ ೨ ಸಾವಿರ ನೀರನ್ನು ನದಿಗೆ ಹರಿಸಲಾಗುತ್ತಿದೆ.
ನದಿಗೆ ಹೆಚ್ಚು ನೀರು ಹರಿಸುವ ಸಂದರ್ಭದಲ್ಲಿ ತಗ್ಗುಪ್ರದೇಶದ ಸಾರ್ವಜನಿಕರಿಗೆ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಸೈರನ್ ಮೊಳಗಿಸುವÀ ಮೂಲಕ ನೀರನ್ನು ಹರಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಅಧೀಕ್ಷಕ ಅಭಿಯಂತರ ಕೆ.ಕೆ. ರಘುಪತಿ, ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ, ಅಣೆಕಟ್ಟೆಯ ಉಸ್ತುವಾರಿ ಇಂಜಿನಿಯರ್ ಸೌಮ್ಯ ರಾಜ್, ಡಿ.ಡಿ. ಕಿರಣ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು. - ಕೆ.ಕೆ. ನಾಗರಾಜಶೆಟ್ಟಿ.