ಪೊನ್ನಂಪೇಟೆ, ಅ. ೨೧: ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆಯಲು ಪ್ರಯತ್ನಿಸಿದನ್ನು ಖಂಡಿಸಿ, ಹಾಗೂ ಡಾ ಅಂಬೇಡ್ಕರ್ ಅವರ ಬಗ್ಗೆ ಅವಹೇಳನವಾಗಿ ಮಾತಾಡಿರುವ ಮಧ್ಯಪ್ರದೇಶದ ವಕೀಲ ಅನಿಲ್ ಮಿಶ್ರ ಅವರನ್ನು ದೇಶದ್ರೋಹ ಮತ್ತು ಕ್ರಿಮಿನಲ್ ಪ್ರಕರಣದಲ್ಲಿ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಕೊಡಗು ಜಿಲ್ಲಾ ಸಮಿತಿ ಹಾಗೂ ಆಲ್ ಇಂಡಿಯ ದಲಿತ ರೈಟ್ಸ್ ಮೂವ್ಮೆಂಟ್ ವತಿಯಿಂದ ಪೊನ್ನಂಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಹೆಚ್. ಆರ್. ರಜನಿಕಾಂತ್, ದಲಿತ ರೈಟ್ಸ್ ಮೂವ್ಮೆಂಟ್ಸ್ ರಾಜ್ಯ ಸಂಚಾಲಕ ಹೆಚ್. ಬಿ. ರಮೇಶ್, ದಲಿತ ಸಮಿತಿ ವಿಭಾಗೀಯ ಸಂಚಾಲಕ ಕೃಷ್ಣಪ್ಪ, ಅಂಬೇಡ್ಕರ್ ವಾದ ಜಿಲ್ಲಾ ಸಂಚಾಲಕ ಶಿವಣ್ಣ, ರಾಜ್ಯ ಸಂಘಟನಾ ಸಂಚಾಲಕ ಟಿ. ಎನ್ ಗೋವಿಂದಪ್ಪ, ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಹೆಚ್. ಬಿ. ಸತೀಶ್ ಅವರ ನೇತೃತ್ವದಲ್ಲಿ ಪೊನ್ನಂಪೇಟೆ ಬಸ್ ನಿಲ್ದಾಣದಿಂದ ಮುಖ್ಯ ರಸ್ತೆಯ ಮೂಲಕ ತಹಶೀಲ್ದಾರ್ ಅವರ ಕಚೇರಿವರೆಗೂ ಘೋಷಣೆ ಕೂಗುತ್ತ, ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ್ ಕಚೇರಿಯ ಎದುರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಂದಾಯ ಪರಿವೀಕ್ಷಕ ಪಿ. ಕೆ. ಸುಧೀಂದ್ರ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಯಿತು.
 
						