ಪೊನ್ನಂಪೇಟೆ, ಅ. ೩೧: ಗೋಣಿಕೊಪ್ಪಲು ಕಾವೇರಿ ಕಾಲೇಜಿ ನಲ್ಲಿ ಎರಡು ದಿನಗಳ ಕಾಲ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ ಕಾವೇರಿಯನ್ಸ್ ಫೆಸ್ಟ್ಗೆ, ಕಾಲೇಜಿನ ಆವರಣದಲ್ಲಿರುವ ಕಾವೇರಿ ಮಾತೆಯ ಪ್ರತಿಮೆಗೆ ಅತಿಥಿಗಳಿಂದ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್ ಸಿ. ಜಿ. ಕುಶಾಲಪ್ಪ ಅವರು ಟ್ರೋಫಿ ಅನಾವರಣಗೊಳಿಸಿ ಮಾತನಾಡಿ, ಕಾವೇರಿ ಕಾಲೇಜು ಕಳೆದ ೫೭ ವರ್ಷಗಳಿಂದಲೂ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇದೀಗ ಕಾವೇರಿಯನ್ಸ್ ಫೆಸ್ಟ್ ಎಂಬ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯ ಅನಾವರಣಕ್ಕೆ ಒಂದು ಸುಂದರ ವೇದಿಕೆಯನ್ನು ಒದಗಿಸಿಕೊಟ್ಟಿದ್ದು, ಎಲ್ಲಾ ವಿದ್ಯಾರ್ಥಿಗಳು ಸೋಲು ಗೆಲುವನ್ನು ಬದಿಗಿಟ್ಟು, ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಂಡು ಸಂಭ್ರಮಿಸಬೇಕು.
ವಿದ್ಯಾಭ್ಯಾಸದ ನಂತರ ಬದುಕು ಸಾಗಿಸಲು ಕೊಡಗಿನಲ್ಲಿಯೇ ಸಾಕಷ್ಟು ಅವಕಾಶಗಳಿದ್ದು, ಅದರ ಸದುಪಯೋಗ ಪಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು. ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಕೆ.ಪಿ. ಅಚ್ಚಯ್ಯ ಅವರು, ಕಾವೇರಿ ಕಾಲೇಜು ಬಿ.ಬಿ.ಎ. ವಿಭಾಗದ ವತಿಯಿಂದ ಆಯೋಜಿಸಲಾಗಿರುವ ಫುಡ್ ಫೆಸ್ಟ್ಗೆ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಖಜಾಂಚಿ ಸಿ.ಡಿ. ಮಾದಪ್ಪ ಮಾತನಾಡಿ, ಹಲವು ದಿನಗಳಿಂದ ಶ್ರಮಪಟ್ಟು, ದಾನಿಗಳ ಸಹಕಾರದಿಂದ ಒಂದು ಉತ್ತಮ ಕಾರ್ಯಕ್ರಮ ಆಯೋಜಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ, ಉಪ ಪ್ರಾಂಶುಪಾಲೆ ಪ್ರೊ. ಎಂ.ಎಸ್. ಭಾರತಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಕಾವೇರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಕೆ. ಶ್ರೀನಿವಾಸ್, ಐ.ಕ್ಯೂ.ಎ.ಸಿ. ಸಂಚಾಲಕಿ ಡಾ. ನಯನಾ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಡಾ. ಪಿ.ಪಿ. ಸವಿತಾ, ಕೆ.ಕೆ. ಚಿತ್ರಾವತಿ, ಹಿರಿಯ ಉಪನ್ಯಾಸಕರಾದ ಎಂ.ಕೆ. ಪದ್ಮ, ಸಿ.ಪಿ. ಸುಜಯ ಕಚೇರಿ ಅಧೀಕ್ಷಕಿ ಟಿ.ಕೆ. ಲತಾ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.