ಮಡಿಕೇರಿ, ನ. ೧೪: ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಜೊತೆಗೆ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿ ಸರಕಾರದ ಬದ್ಧತೆಯಾಗಿದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು.

ರೂ. ೩.೫೦ ಕೋಟಿ ವೆಚ್ಚದಲ್ಲಿ ಉದ್ದೇಶಿಸಿರುವ ಮಡಿಕೇರಿ-ಗಾಳಿಬೀಡು-ಕಡಮಕಲ್ಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ಮಾತನಾಡಿದ ಶಾಸಕರು, ಪ್ರಾಥಮಿಕ ಹಂತದಲ್ಲಿ ೩.೪೫ ಕಿ.ಮೀ. ವಿಸ್ತೀರ್ಣದ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಈ ರಸ್ತೆಯ ಅಭಿವೃದ್ಧಿಗೆ ಹಲವು ವರ್ಷಗಳ ಬೇಡಿಕೆ ಇದೆ. ಪ್ರತಿ ಬಾರಿ ಇಲ್ಲಿಗೆ ಆಗಮಿಸಿದ ಸಂದರ್ಭ ಸ್ಥಳೀಯರು ಪ್ರಶ್ನಿಸುತ್ತಿದ್ದರು. ರಸ್ತೆ ಸಮಸ್ಯೆ ಪರಿಹಾರಕ್ಕೆ ಸರಕಾರ ಅಗತ್ಯ ಅನುದಾನ ನೀಡಿದೆ. ಮುಂದಿನ ಜನವರಿ-ಫೆಬ್ರವರಿ ವೇಳೆಗೆ ಉಳಿದ ೩ ಕೋಟಿ ಅನುದಾನ ನೀಡಿ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಹೇಳಿದರು.

ಕಡಮಕಲ್ಲು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಕಾನೂನು ತೊಡಕು ಇರುವ ಹಿನ್ನೆಲೆ ಕಾನೂನು ಅಡಿಯಲ್ಲಿಯೇ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಲಾಗುವುದು. ಇಲ್ಲಿರುವ ಸೇತುವೆಯನ್ನು ಮುಂದಿನ ದಿನದಲ್ಲಿ ಅಭಿವೃದ್ಧಿಗೊಳಿಸಲಾಗುವುದು. ಕ್ಷೇತ್ರದ ರಸ್ತೆಗಳ ಗುಂಡಿ ಮುಚ್ಚುವ ಕೆಲಸ ಲೋಕೋಪಯೋಗಿ ಇಲಾಖೆ ಮೂಲಕ ಆರಂಭಗೊAಡಿದೆ. ಪ್ರತಿಕೂಲ ಹವಾಮಾನದಿಂದ ರಸ್ತೆ ದುರಸ್ತಿ ಸಾಧ್ಯವಾಗಿರಲಿಲ್ಲ. ತ್ವರಿತವಾಗಿ ಗುಂಡಿ ಮುಚ್ಚುವ (ಮೊದಲ ಪುಟದಿಂದ) ಕೆಲಸ ಹಾಗೂ ರಸ್ತೆ ಅಭಿವೃದ್ಧಿ ಕೆಲಸ ಮಾಡಲಾಗುವುದು. ಗುಣಮಟ್ಟದಲ್ಲಿ ರಸ್ತೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಜಿಲ್ಲಾ ವಕ್ತಾರ ತೆನ್ನೀರ ಮೈನಾ, ತಾ.ಪಂ. ಮಾಜಿ ಸದಸ್ಯೆ ಡಾ. ಜಯಂತಿ ಶೆಟ್ಟಿ, ವಲಯ ಕಾಂಗ್ರೆಸ್ ಅಧ್ಯಕ್ಷ ಸುಭಾಷ್ ಅಳ್ವ, ಪ್ರಮುಖರಾದ ಪುಷ್ಪಾ ಪೂಣಚ್ಚ, ಅಪ್ರು ರವೀಂದ್ರ, ಕೊಂಬಾರನ ಗಣಪತಿ, ರೋಶನ್, ಎ.ಎ. ಪೊನ್ನಪ್ಪ, ಅಕ್ರಮ ಸಕ್ರಮ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ ಸೇರಿದಂತೆ ಇನ್ನಿತರರು ಹಾಜರಿದ್ದರು.