ನಾಪೋಕ್ಲು, ನ. ೨೨: ಸಂಪಾಜೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಮತ್ತು ಮಂಗಳೂರು ವಿಭಾಗದ ವತಿಯಿಂದ ಕಾರ್ಮಿಕರ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಸರಕಾರದ ಕನಿಷ್ಟ ವೇತನ ಸಲಹಾ ಮಂಡಳಿ ಬೆಂಗಳೂರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕೆಲಸ ಮಾಡುವ ಸಮಯದಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಪ್ರಥಮ ಚಿಕಿತ್ಸೆಯನ್ನು ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ ಸರಕಾರದಿಂದ ಪರಿಹಾರ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು, ಕಾರ್ಮಿಕರಿಗೆ ಮನೆ ಕಟ್ಟುವಾಗ ಹಾಗೂ ತನ್ನ ಮಕ್ಕಳ ವಿದ್ಯಾಭ್ಯಾಸಕ್ಕೆ, ಆರೋಗ್ಯಕ್ಕೆ ಸರಕಾರ ಕೊಡುವ ಸಹಾಯ ಧನ, ಸ್ಕಾಲರ್ ಶಿಫ್ ಮತ್ತು ಕೆಲಸದ ಸಂದರ್ಭದಲ್ಲಿ ಉಂಟಾಗುವ ಅನಾಹುತಗಳಿಗೆ ಸರಕಾರ ಕೊಡುವ ಸವಲತ್ತುಗಳ ಮಾಹಿತಿಯನ್ನು ನೀಡಿ ಸದುಪಯೋಗಪಡಿಸಲು ಕರೆ ನೀಡಿ ಕಾರ್ಮಿಕ ಅಧಿಕಾರಿಗಳು ಕಾಲಕಾಲಕ್ಕೆ ನಿರ್ಮಾಣ ಮತ್ತು ಇತರ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿ ನಿಗದಿತ ಸಮಯಕ್ಕಿಂತ ಹೆಚ್ಚು ಕೆಲಸ ಮಾಡಿಸದೆ ಸಮಯಕ್ಕೆ ತಕ್ಕ ಊಟ ಉಪಚಾರ ಕುಡಿಯುವ ನೀರಿನ ವ್ಯವಸ್ಥೆ ಪ್ರಥಮ ಚಿಕಿತ್ಸೆಗೆ ಬೇಕಾಗುವ ಸವಲತ್ತುಗಳು ಇದೆಯಾ ಎಂದು ಪರಿಶೀಲಿಸಲು ಸೂಚಿಸಿ ಸರಕಾರದ ಸವಲತ್ತುಗಳನ್ನು ನೈಜ ಕಾರ್ಮಿಕರಿಗೆ ಮಾತ್ರ ದೊರಕುವಂತೆ ನಿಗಾ ವಹಿಸಲು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮತಿ ಶಕ್ತಿವೇಲು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ನಾರಾಯಣ ಕಿಳಂಗೋಡಿ, ರಿಯಾಸ್ ಉಳ್ಳಾಲ ಮಾಹಿತಿ ನೀಡಿದರು. ಕಾರ್ಮಿಕ ಅಧಿಕಾರಿ ಗಣಪತಿ ಹೆಗ್ಡೆ ಹಾಗೂ ಕಾರ್ಮಿಕ ಮುಖಂಡ ಶ್ರೀಧರ್ ಕಡೆಪಾಲ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.