ನಾಪೋಕ್ಲು, ಡಿ. ೧೧: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ದಿನಾಚರಣೆ ತಾ. ೧೫ ರಂದು ಮೂರ್ನಾಡಿನ ಗೌಡ ಸಮಾಜದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ವಹಿಸಲಿದ್ದು ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ. ಹರೀಶ್, ಮೂರ್ನಾಡು ಗೌಡ ಸಮಾಜದ ಮಾಜಿ ಅಧ್ಯಕ್ಷ ಚೆಟ್ಟಿಮಾಡ ಟಿ. ಕಾರ್ಯಪ್ಪ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಮಾಜಿ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಗೆ ನಮ್ಮ ಹಿರಿಯರ ಕೊಡುಗೆ ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಲಿದ್ದಾರೆ.
ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚೊಕ್ಕಾಡಿ ಎನ್. ಅಪ್ಪಯ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಗೆ ಸಮಾಜಗಳ ಪಾತ್ರ ವಿಷಯದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ಸಮಾರಂಭದಲ್ಲಿ ಅರೆಭಾಷೆ ರಸಪ್ರಶ್ನೆ ಪೈಪೋಟಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಂಚಾಲಕ ಸೂದನ ಎಸ್. ಈರಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.