ವೀರಾಜಪೇಟೆ, ಡಿ. ೧೨: ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿರುವ ಹಿನ್ನೆಲೆ ವೀರಾಜಪೇಟೆಯ ೧೯ ವಲಯಗಳಲ್ಲಿ ೧೬ ವಲಯಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಹೆಚ್. ಮತೀನ್ ಹೇಳಿದರು. ವೀರಾಜಪೇಟೆ ನಗರದ ನಿರೀಕ್ಷಣಾ ಮಂದಿರದ ಆವರಣದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಬಡ ಜನತೆಗೆ ತುಂಬಾ ಅನುಕೂಲವಾಗಿದೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ನಿರೀಕ್ಷೆಗೂ ಮೀರಿ ಅನುದಾನ ತಂದಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆಗಳು ಇಂದು ಅಭಿವೃದ್ಧಿಯತ್ತ ಸಾಗುತ್ತಿವೆ. ವೀರಾಜಪೇಟೆ ಪಟ್ಟಣದಲ್ಲಿ ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದ ರಸ್ತೆ ಅಗಲೀಕರಣ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊAಡಿದ್ದು, ಮುಂದಿನ ಚುನಾವಣೆಗೆ ಕಾಂಗ್ರೆಸ್ ಸರಕಾರ ಮಾಡಿರುವ ಅಭಿವೃದ್ಧಿ ಕೆಲಸಗಳೇ ಅಡಿಪಾಯವಾಗಲಿದೆ. ಮಳೆಯಿಂದಾಗಿ ಅಭಿವೃದ್ಧಿ ಕಾಮಗಾರಿಗೆ ಹಿನ್ನಡೆಯಾಗಿತ್ತು. ಅದಕ್ಕಾಗಿ ವಿರೋಧ ಪಕ್ಷಗಳು ತೇಜೋವಧೆ ಮಾಡುವುದು ಸರಿಯಲ್ಲ. ಶಾಸಕ ಪೊನ್ನಣ್ಣ ಅವರ ಕಾರ್ಯಗಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ಸಮಿತಿ ಸದಸ್ಯರಾದ ಅಮ್ಮತ್ತಿಯ ಮೈಕಲ್ ಮಾತನಾಡಿ, ಅಮ್ಮತ್ತಿ ವ್ಯಾಪ್ತಿಯಲ್ಲಿ ಕೆಲವು ವರ್ಷಗಳಿಂದ ಗ್ರಾಮೀಣ ಭಾಗದ ಕೆಲವು ರಸ್ತೆಗಳಲ್ಲಿ ಜನರು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ಈಗ ಅಮ್ಮತ್ತಿ-ಪಾಲಿಬೆಟ್ಟ ರಸ್ತೆ ಹಾಗೂ ತಿತಿಮತಿ ರಸ್ತೆಗಳು ಅಭಿವೃದ್ಧಿಗೊಂಡಿವೆ. ಇದರಿಂದ ಆ ಭಾಗದ ಜನರಿಗೆ ಅನುಕೂಲವಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷೆ ಕೆ.ಆರ್. ಟೀನಾ ಸಭೆಯಲ್ಲಿ ಮಾತನಾಡಿ, ಸರಕಾರ ಅಭಿವೃದ್ಧಿ ಪರ ಕೆಲಸ ಮಾಡುತ್ತಿದೆ. ಗ್ರಾಮೀಣ ಪ್ರದೇಶಗಳ ರಸ್ತೆಗಳು ಸೇರಿದಂತೆ ಐನ್ಮನೆ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರು ಅನುದಾನ ಒದಗಿಸಿಕೊಟ್ಟು ಜನಸಾಮಾನ್ಯರ ಮೂಲಭೂತ ಅವಶ್ಯಕತೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಪ್ರಧಾನ ಕಾರ್ಯದರ್ಶಿಗಳಾದ ರಚನ್ ಉತ್ತಪ್ಪ ಮತ್ತು ಅಗಸ್ಟಿನ್ ಬೆನ್ನಿ, ಕೋಶಾಧಿಕಾರಿ ದಿನೇಶ್ ನಂಬಿಯಾರ್, ಸಂಯೋಜಕರಾದ ರಂಜಿತ್ ಪೊನ್ನಣ್ಣ, ಖಜಾಂಚಿ ಮುಕ್ಕಾಟಿರ ವಿನಿತಾ ಕಾವೇರಮ್ಮ, ಸದಸ್ಯರುಗಳಾದ ಅಬ್ದುಲ್ ಲತೀಫ್, ಮೊಯಿದು, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.