ಕಣಿವೆ, ಡಿ. ೨೬: ಕೂಡಿಗೆ ಕೃಷಿ ಫಾರಂನಲ್ಲಿ ರೈತ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್, ಮಣ್ಣು ಹಾಗೂ ನೀರನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರ ಮಾಡಬೇಕಿದೆ.

ಇತ್ತೀಚಿನ ದಿನಗಳಲ್ಲಿ ರೈತರು ಬೆಳೆವ ಯಾವುದೇ ಬೆಳೆಗಳಿಗೆ ಕೀಟ ಬಾಧೆ ಕಾಡುತ್ತಿದ್ದು ಅದರ ಹತೋಟಿಗೆ ಕೃಷಿ ವಿಜ್ಞಾನಿಗಳು ನೀಡುವ ಸಲಹೆಗಳನ್ನು ರೈತರು ಪಾಲಿಸಬೇಕಿದೆ.

ಪ್ರಧಾನಮಂತ್ರಿ ಸಣ್ಣ ಆಹಾರ ಸಂಸ್ಕರಣೆ ಹಾಗೂ ಉದ್ಯಮಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಸಿಗುವ ಸವಲತ್ತುಗಳನ್ನು ರೈತರಿಗೆ ಒದಗಿಸಲಾಗುತ್ತಿದೆ. ಈಗಾಗಲೇ ೭.೫೦ ಕೋಟಿ ರೂ.ಗಳ ಸಹಾಯ ಧನದಲ್ಲಿ ಕೊಡಗಿನಲ್ಲಿ ೧೦೭ ಕೃಷಿಕರು ಪ್ರಯೋಜನ ಪಡೆದುಕೊಂಡಿದ್ದಾರೆ. ಅಲ್ಲದೇ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ಕಾಫಿ, ಜೇನು, ಮೀನು, ಚಪಾತಿ ಸಂಸ್ಕರಣೆ, ಎಣ್ಣೆಯ ಗಾಣಗಳು ಸೇರಿದಂತೆ ವಿವಿಧ ಆಹಾರಗಳ ಸಂಸ್ಕರಣೆಯತ್ತ ರೈತರು ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಇಲಾಖೆಯ ಯೋಜನೆಗಳ ಕುರಿತು ಉಪ ಕೃಷಿ ನಿರ್ದೇಶಕ ಸೋಮಶೇಖರ್ ಮಾಹಿತಿ ನೀಡಿದರು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ ನಾಯಕ್, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಬಿ. ಭಾರತೀಶ್, ಹಾಸನ ಹಾಲು ಒಕ್ಕೂಟದ ಕೊಡಗು ನಿರ್ದೇಶಕ ಕೆ.ಕೆ. ಹೇಮಂತಕುಮಾರ್ ಮಾತನಾಡಿದರು. ಇದೇ ಸಂದರ್ಭ ಕೃಷಿ ಪಂಡಿತ ಪ್ರಶಸ್ತಿ ವಿಜೇತ ರೈತರಾದ ಮರಗೋಡಿನ ಕೆ.ಜಿ. ಪ್ರೇಮ, ಉದಯೋನ್ಮುಖ ಕೃಷಿ ಪ್ರಶಸ್ತಿ ಪಡೆದ ಹಾಲಗುಂದ ಪಿ.ಬಿ. ಬೋಪಣ್ಣ, ಕಿರಗೂರು ರೇವತಿ, ರಾಜ್ಯಮಟ್ಟದ ಕೃಷಿ ಪ್ರಶಸ್ತಿ ವಿಜೇತ ರೈತರಾದ ಕಾಂತೂರಿನ ವಿ.ಎಂ. ಧನಂಜಯ, ಕಿಗ್ಗಾಲು ಪಿ.ಎಂ. ವೇಣುಕುಮಾರ್, ಕೆ. ಬಾಡಗದ ಬೋಪಣ್ಣ, ನಾಲ್ಲೇರಿಯ ಅಲ್ಲೂಮಾಡ ಲೀಲಾ ಇವರನ್ನು ಸನ್ಮಾನಿಸಲಾಯಿತು.

ಚೆಟ್ಟಳ್ಳಿ ಕೃಷಿ ಸಂಶೋಧನಾ ಸಂಸ್ಥೆಯ ಕೃಷಿ ವಿಜ್ಞಾನಿಗಳಾದ ಡಾ. ರಾಣಿ, ಡಾ. ರಾಜೇಂದ್ರನ್ ಅವರು ರೈತರಿಗೆ ಉಪಯುಕ್ತ ಮಾಹಿತಿ ನೀಡಿದರು.

ಸಹಾಯಕ ಕೃಷಿ ನಿರ್ದೇಶಕರಾದ ವೀರಣ್ಣ, ಶಿವಮೂರ್ತಿ ಇದ್ದರು.