ಮಡಿಕೇರಿ, ಜ. ೯: ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ೯ ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರಾö್ಯಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ ೨೦ ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಹಾಗೆಯೇ ಜಿಲ್ಲಾ ಕ್ರೀಡಾಂಗಣದಲ್ಲಿ ಮಿನಿ ಒಳಾಂಗಣ ಸೆಮಿ ಇಂಡೋರ್ ಸಿಂಥಟಿಕ್ ಬಾಸ್ಕೆಟ್ ಬಾಲ್ ಅಂಕಣ ನಿರ್ಮಾಣಕ್ಕೆ ಸರ್ಕಾರದಿಂದ ೧೫೦ ಲಕ್ಷ ರೂ. ವೆಚ್ಚಕ್ಕೆ ಅನುಮೋದನೆ ದೊರೆತಿದ್ದು, ಈಗಾಗಲೇ ೨೦ ಲಕ್ಷ ರೂ. ಬಿಡುಗಡೆಯಾಗಿದೆ. ಸರ್ಕಾರ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಿದ್ದು, ಕ್ರೀಡಾಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಕೊಡಗು ಜಿಲ್ಲೆ, ಕ್ರೀಡೆಯಲ್ಲಿ ಮತ್ತಷ್ಟು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮುಖ್ಯಮಂತ್ರಿ ಅವರ ವಿಶೇಷ ಅನುದಾನ ಅಥವಾ ಶಾಸಕರ ನಿಧಿಯಿಂದ ಅನುದಾನ ಬಿಡುಗಡೆ ಮಾಡಿಸಿ, ಪ್ರಸಕ್ತ ವರ್ಷವೇ ಭೂಮಿ ಪೂಜೆ ನೆರವೇರಿಸಲಾಗುವುದು. ಸರ್ಕಾರಿ ನೌಕರರ ಭವನ ನಿರ್ಮಾಣ ಸಂಬAಧ ನೀಲ ನಕಾಶೆ ಸಿದ್ಧಪಡಿಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ಸಲಹೆ ಮಾಡಿದರು. ಸರ್ಕಾರಿ ನೌಕರರು ಪ್ರತಿ ನಿತ್ಯ ಒಂದಲ್ಲ ಒಂದು ರೀತಿ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಾರೆ. ಒತ್ತಡದ ನಡುವೆ ಆರೋಗ್ಯಕ್ಕೆ ಸಮಯ ನೀಡಿದ್ದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿದೆ. ಪ್ರತಿನಿತ್ಯದ ಕೆಲಸದ ನಡುವೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಓಟ, ನಡಿಗೆ, ಹೀಗೆ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು.
೪ನಾಲ್ಕನೇ ಪುಟಕ್ಕೆ
(ಮೊದಲ ಪುಟದಿಂದ) ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಲು ಸಾಧ್ಯವಾಗಲಿದೆ ಎಂದು ಡಾ.ಮಂತರ್ ಗೌಡ ವಿವರಿಸಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಎಂ.ಸಿ.ಅರುಣ್ ಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಜಿಲ್ಲಾ ಮಟ್ಟದಲ್ಲಿ ಸರ್ವೋತ್ತಮ ಪ್ರಶಸ್ತಿ ನೀಡಲಾಗುತ್ತಿದ್ದು, ಇದನ್ನು ಮುಂದುವರಿಸುವAತಾಗಬೇಕು. ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಜಾಗವಿದ್ದು, ಹೆಚ್ಚಿನ ಅನುದಾನ ಒದಗಿಸುವಂತಾಗಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಸಂಘದ ನಿರ್ದೇಶಕ ಎಸ್.ಹೊನ್ನೇಗೌಡ, ಜಿಲ್ಲಾ ಕಾರ್ಯದರ್ಶಿ ಬಿ.ಜಿ.ಸಂದೀಪ, ಜಿಲ್ಲಾ ಖಜಾಂಜಿ ಪಿ.ಡಿ.ರಾಜೇಶ್, ರಾಜ್ಯ ಪರಿಷತ್ತಿನ ಸದಸ್ಯ ಪಿ.ಎಂ.ಬಾಬು, ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಕೆ.ಎಂ.ತಿಮ್ಮಯ್ಯ, ಜಿಲ್ಲಾ ಶಾಖೆಯ ಕಾರ್ಯಾಧ್ಯಕ್ಷ ಮೋಹನ್ ಪೆರಾಜೆ, ಗೌರವಾಧ್ಯಕ್ಷ ಶಮ್ಮಿ ಎಸ್.ಟಿ, ಇತರರು ಇದ್ದರು. ಹಾಕಿ ಸೇರಿದಂತೆ ವಿವಿಧ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.