ವೀರಾಜಪೇಟೆ, ಫೆ. ೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಬಿ.ಸಿ. ಟ್ರಸ್ಟ್ ವೀರಾಜಪೇಟೆಯ ವತಿಯಿಂದ ಮಾಯಮುಡಿ ವಲಯದ ವಿನಾಯಕನಗರ ಕಾರ್ಯಕ್ಷೇತ್ರದ ತಿತಿಮತಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದುಶ್ಚಟಗಳ ವಿರೋಧಿ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವೈದ್ಯರಾದ ಡಾ.ಗಾನಶ್ರೀ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಹದಿ ಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ.

ತಮ್ಮ ಓದಿನ ಗುಣಮಟ್ಟವನ್ನು ಕಳೆದು ಕೊಳ್ಳುತ್ತಿದ್ದಾರೆ. ಗುಟ್ಕಾ ಸೇವನೆ ಮದ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರ ಹಾನಿಕಾರವಲ್ಲದೆ ನಮ್ಮ ಪರಿವಾರಕ್ಕೂ ಹಾನಿಯನ್ನು ಉಂಟುಮಾಡುತ್ತದೆ.

ಈ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆಗಳು ಬರಬಹುದು. ಒಂದು ವೇಳೆ ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆಯನ್ನು ಕಂಡಲ್ಲಿ ಸಂಬAಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು.

ಈ ಸಂದರ್ಭ ಬೈಕ್ ಸಂಚಾರದ ಸಂದರ್ಭದಲ್ಲಿ ಮೊಬೈಲ್ ಬಳಕೆಯಿಂದ ಆಗುತ್ತಿರುವ ಅಪಘಾತಗಳ ಕುರಿತು ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದರು. ಮಾದಕ ವಸ್ತು ಸೇವನೆಯಿಂದ ಆಗುವ ಆರೋಗ್ಯ ಸಮಸ್ಯೆ, ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ಒಳಗಾದ ಜನಗಳ ಪರಿಸ್ಥಿತಿಯನ್ನು ವಿವರಣೆ ನೀಡುವ ಮೂಲಕ ಮಾದಕ ವಸ್ತು ಮುಕ್ತ ವಿದ್ಯಾರ್ಥಿ ಜೀವನ ನಮ್ಮದಾಗಲಿ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ತಿತಿಮತಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿನೋದ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ರೂಪ ಎಂ., ಸೋಜಿತ್ ಕೆ.ಎಸ್., ಮಮತಾ ಎಚ್.ಎಸ್., ಐಶ್ವರ್ಯ ಟಿ.ಎಸ್., ವಲಯದ ಕೃಷಿ ಮೇಲ್ವಿಚಾರಕರಾದ ವಸಂತ ಪೂಜಾರಿ, ಸೇವಾ ಪ್ರತಿನಿಧಿ ಸರೋಜ, ಸೌಜನ್ಯ ಹಾಗೂ ಶಾಲೆಯ ಇತರ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.