ಕುಶಾಲನಗರ, ಫೆ. ೧೪: ನದಿಯ ನೀರು ನೇರವಾಗಿ ಕಲುಷಿತಗೊಳ್ಳದಂತೆ ಎಚ್ಚರ ವಹಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಉದ್ಯಮಿ ಎಸ್‌ಎಲ್‌ಎನ್ ವಿಶ್ವನಾಥ್ ಕರೆ ನೀಡಿದರು.

ಕುಶಾಲನಗರ - ಕೊಪ್ಪ ಗಡಿ ಭಾಗದಲ್ಲಿ ರೋಟರಿ ಕುಶಾಲನಗರ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕೊಪ್ಪ ಭಾರತ ಮಾತಾ ಪದವಿ ಕಾಲೇಜು, ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತು ಜಂಟಿ ಆಶ್ರಯದಲ್ಲಿ ಐ ಲವ್ ಕಾವೇರಿ ಘೋಷವಾಕ್ಯದೊಂದಿಗೆ ನಡೆದ ಮೂರನೇ ವರ್ಷದ ಕಾವೇರಿ ನದಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛ ಕಾವೇರಿ ಸಂಬAಧ ಪ್ರತಿಯೊಬ್ಬರು ಕಾಳಜಿ ವಹಿಸಬೇಕಾಗಿದೆ. ನೀರಿನ ಮಹತ್ವದ ಬಗ್ಗೆ ಅರಿವು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು. ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛ ಕುಶಾಲನಗರ ಸ್ವಚ್ಛ ಕಾವೇರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ರೋಟರಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ನಿರಂತರವಾಗಿ ಕಾರ್ಯಕ್ರಮ, ಚಟುವಟಿಕೆಗಳ ಮೂಲಕ ನದಿ ಸಂರಕ್ಷಣೆಯ ಬಗ್ಗೆ ಮುತುವರ್ಜಿ ವಹಿಸಿರುವ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ಪರಿಸರ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮಾಹಿತಿ ಒದಗಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದರು.

ರೋಟರಿ ಅಧ್ಯಕ್ಷ ಮನು ಪೆಮ್ಮಯ್ಯ ಮಾತನಾಡಿ, ಕುಶಾಲನಗರ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಒಂದು ತಿಂಗಳ ಕಾಲ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಪಟ್ಟಣದ ಸ್ವಚ್ಛತೆ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಆಯೋಜಕರಾದ ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಹಲವು ಕಾರಣಗಳಿಂದ ಜೀವನದಿ ಕಾವೇರಿ ನೇರವಾಗಿ ಮಲಿನಗೊಳ್ಳುತ್ತಿದ್ದು ಜನರಿಗೆ ನೀರಿನ ಬಳಕೆ ಮಾಡಲು ಅಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಸ್ವಚ್ಛ ಕಾವೇರಿಗಾಗಿ ಪ್ರತಿಯೊಬ್ಬರು ಪಣತೊಡಬೇಕೆಂದರು.

ಉದ್ಯಮಿ ಎಸ್‌ಎಲ್‌ಎನ್ ಸಾತಪ್ಪನ್, ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ಪ್ರದೀಪ್ ಕುಮಾರ್ ಕುಶಾಲನಗರ ಗಡಿಭಾಗದ ೧೮೦ ವರ್ಷಗಳ ಇತಿಹಾಸದ ಹಳೆಯ ಸೇತುವೆಯ ಪುನಶ್ಚೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.

ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಬೋಧಕರು ರೋಟರಿ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು, ಕುಶಾಲನಗರ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ ಪ್ರಮುಖರು ಕಾವೇರಿ ಸೇತುವೆಯ ಕೆಳಭಾಗದಲ್ಲಿ ತುಂಬಿದ್ದ ತ್ಯಾಜ್ಯಗಳನ್ನು ತೆರವು ಮಾಡುವಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ಕುಶಾಲನಗರ ಪುರಸಭೆ ಮತ್ತು ಕೊಪ್ಪ ಗ್ರಾಮ ಪಂಚಾಯಿತಿಯ ತ್ಯಾಜ್ಯ ವಿಲೇವಾರಿ ವಾಹನಗಳ ಮೂಲಕ ತ್ಯಾಜ್ಯಗಳನ್ನು ಭುವನಗಿರಿ ಕೇಂದ್ರಕ್ಕೆ ಸಾಗಿಸಲಾಯಿತು.

ಸ್ವಚ್ಛತಾ ಕಾರ್ಯಕ್ರಮಕ್ಕೂ ಮೊದಲು ಪುಲ್ವಾಮ ಧಾಳಿಯಲ್ಲಿ ಬಲಿಯಾದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು.

ಈ ಸಂದರ್ಭ ರೋಟರಿ ಕಾರ್ಯದರ್ಶಿ ಮಂಜುನಾಥ್, ಸಹಾಯಕ ರಾಜ್ಯಪಾಲರಾದ ಉಲ್ಲಾಸ್ ಕೃಷ್ಣ, ಎಸ್.ಕೆ. ಸತೀಶ್ ಡಾ. ಹರಿ ಎ. ಶೆಟ್ಟಿ ಮತ್ತು ರೋಟರಿ ಸದಸ್ಯರು ಭಾರತ ಮಾತಾ ಕಾಲೇಜಿನ ಪ್ರಾಂಶುಪಾಲರಾದ ಫಾ. ಅಭಿನ್, ಫಾ. ಟಿಟ್ಟೋ ಥಾಮಸ್, ಎನ್‌ಎಸ್‌ಎಸ್ ಶಿಬಿರ ಅಧಿಕಾರಿ ದಿನೇಶ್ ಕುಮಾರ್, ಅಭಿಷೇಕ್, ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷೆ ಚೈತನ್ಯ, ಕಾವ್ಯ ಗೌಡ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ವನಿತಾ ಚಂದ್ರಮೋಹನ್, ಧರಣಿ ಸೋಮಯ್ಯ, ಕೆ.ಪಿ. ನಾಗರಾಜ್ ಮತ್ತಿತರರು ಇದ್ದರು.