ಸೋಮವಾರಪೇಟೆ, ಏ. ೧೫: ಶಿಕ್ಷಣವೇ ಸಮಾನತೆ ಮತ್ತು ಸ್ವಾಭಿಮಾನಕ್ಕೆ ದಾರಿ. ಶಿಕ್ಷಣದ ಮೂಲಕವೇ ಸಮಾಜದ ಎಲ್ಲಾ ಬಿಕ್ಕಟ್ಟುಗಳನ್ನು ದೂರ ಮಾಡಬಹುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಹೆಚ್.ಜೆ. ಹನುಮಯ್ಯ ಅಭಿಪ್ರಾಯಿಸಿದರು.
ಹಿರಿಕರ ಗ್ರಾಮದ ಶ್ರೀ ರಾಮೇಶ್ವರ ಯುವಕ ಸಂಘದ ವತಿಯಿಂದ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಡಾ ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಜ್ಞಾನದಿಂದ ತಮ್ಮ ಹಕ್ಕುಗಳನ್ನು ಅರಿತುಕೊಳ್ಳಬೇಕು ಎಂದರು. ಸಾಮಾಜಿಕ ಅಸಮಾನತೆಗಳನ್ನು ನಿವಾರಿಸಲು ಶಿಕ್ಷಣವೇ ಶಕ್ತಿಯುತ ಆಯುಧವಾಗಿದ್ದು, ಪ್ರತಿಯೊಬ್ಬರೂ ಅದನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಡಾ. ಬಿ.ಆರ್ ಅಂಬೇಡ್ಕರ್ ಸಂವಿಧಾನದಲ್ಲಿ ಸಮಾನತೆಯ ಮಹತ್ವವನ್ನು ಸ್ಪಷ್ಟವಾಗಿ ಪ್ರತಿಪಾದಿಸಿದ್ದನ್ನು ನೆನಪಿಸಿದರು. ಭವಿಷ್ಯದಲ್ಲಿ ದೇಶವನ್ನು ಆಳುವವರು ಸಂವಿಧಾನವನ್ನು ಬುಡಮೇಲು ಮಾಡುವ ಸಾಧ್ಯತೆ ಬಗ್ಗೆ ಅಂದೇ ಅಂಬೇಡ್ಕರ್ ಅವರು ಸಂಶಯ ವ್ಯಕ್ತಪಡಿಸಿದ್ದರು. ಇಂದಿನ ಪರಿಸ್ಥಿತಿಯಲ್ಲಿ ಅವರ ಆತಂಕ ನಿಜವಾಗುತ್ತಿರುವಂತೆ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟರು. ಆದರೆ ಸಂವಿಧಾನದ ರಕ್ಷಣೆ ನಮ್ಮೆಲ್ಲರ ಜನ್ಮಸಿದ್ಧ ಹಕ್ಕು ಮತ್ತು ಕರ್ತವ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕರೂ ಅದನ್ನು ಕಾಪಾಡಲು ಎಚ್ಚರಿಕೆಯಿಂದ ಮುಂದಾಗಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಯುವಕ ಸಂಘದ ಅಧ್ಯಕ್ಷ ಎಚ್.ಆರ್ ಮೋಹನ್ದಾಸ್, ಗೌಡಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಈ ವೆಂಕಟೇಶ್, ಗೌಡಳ್ಳಿ ಬಿಜಿಎಸ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್, ಐಗೂರು ಜೂನಿಯರ್ ಕಾಲೇಜು ಪ್ರಾಂಶುಪಾಲ ಉಮೇಶ್ ಕುಮಾರ್, ಯುವಕ ಸಂಘದ ಪದಾಧಿಕಾರಿಗಳಾದ ಶಿವಣ್ಣ, ಪ್ರವೀಣ್, ರಂಜಿತ್, ವಂಶಿ, ಹೇಮಲತ ಮತ್ತಿತರರು ಇದ್ದರು. ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಿ.ಈ ವೆಂಕಟೇಶ್ ಮತ್ತು ಪತ್ರಕರ್ತ ರವಿ ಅವರುಗಳನ್ನು ಸನ್ಮಾನಿಸಲಾಯಿತು. ಕ್ರೀಡಾ ಸ್ಪರ್ಧೆಗಳು ನಡೆದವು.