ಮಡಿಕೇರಿ, ಮೇ.೫: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ವ್ಯಾಪ್ತಿಯ ನೆಲ್ಯಹುದಿಕೇರಿ ಗ್ರಾಮ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು ತೋಟಗಳಿಗೆ ನುಗ್ಗಿರುವ ಕಾಡಾನೆಗಳು ಅಡಿಕೆ ಗಿಡಗಳನ್ನು ನಾಶ ಪಡಿಸಿರುವ ಘಟನೆ ನಡೆದಿದೆ.

ಗ್ರಾಮದ ಬೆಳೆಗಾರ ಚಂದ್ರಶೇಖರ್ ಎಂಬವರ ತೋಟಕ್ಕೆ ಶನಿವಾರ ರಾತ್ರಿ ಹತ್ತಕ್ಕೂ ಹೆಚ್ಚಿನ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿವೆ. ೫೦ಕ್ಕೂ ಅಧಿಕ ಅಡಿಕೆ ಗಿಡಗಳನ್ನು ನಾಶಪಡಿಸಿದ್ದು, ಅಪಾರ ನಷ್ಟ ಉಂಟಾಗಿದೆ. ಕಳೆದ ಐದಾರು ವರ್ಷಗಳಿಂದ ಈ ಭಾಗದಲ್ಲಿ ಕಾಡಾನೆಗಳು ನಿರಂತರವಾಗಿ ತೋಟಗಳಿಗೆ ಲಗ್ಗೆ ಇಟ್ಟು ಬೆಳೆ ನಾಶ ಪಡಿಸುತ್ತಿವೆ. ಕಳೆದ ವರ್ಷವೂ ಕಾಡಾನೆ ದಾಳಿಯಿಂದ ಬೆಳೆ ನಷ್ಟವಾಗಿದ್ದು, ಪರಿಹಾರಕ್ಕೆ ಅರ್ಜಿ ಸಲ್ಲಿಸಿ ಇಲ್ಲಿಯವರೆಗೆ ಯಾವುದೇ ಪರಿಹಾರ ದೊರೆತ್ತಿಲ್ಲ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ.