ಕಣಿವೆ, ಮೇ ೨೦ : ವಿದ್ಯಾರ್ಥಿಗಳು ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗದೇ ಸಂಗೀತ, ಕಲೆ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯ, ಸಾಮರ್ಥ್ಯವನ್ನು ಪ್ರದರ್ಶಿಸಬೇಕು. ಅದಕ್ಕೆ ಈ ಯುವ ವೈಭವ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಕಲ್ಪಿಸಿ ಕೊಟ್ಟಿದೆ. ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ. ಇಂತಹ ಪ್ರಯತ್ನಗಳು ಹೀಗೆಯೇ ಮುಂದುವರೆಯಲಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಭಿಮತ ವ್ಯಕ್ತಪಡಿಸಿದರು.

ಇಲ್ಲಿನ ಚಿಕ್ಕ ಅಳುವಾರದ ಜ್ಞಾನಕಾವೇರಿ ಆವರಣದ ಕೊಡಗು ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಅಂತರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಯುವ ವೈಭವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಇದ್ದರೂ ಎಲ್ಲ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆಯ ವಿಶ್ವವಿದ್ಯಾಲಯಗಳತ್ತ ಮುಖ ಮಾಡುತ್ತಿರುವುದು ಬೇಸರದ ಸಂಗತಿ. ನಮ್ಮ ಜಿಲ್ಲೆಯ ವಿಶ್ವವಿದ್ಯಾಲಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಾಲಕರು, ಶಿಕ್ಷಕರು ಮಕ್ಕಳಿಗೆ ನಮ್ಮ ವಿಶ್ವವಿದ್ಯಾಲಯದಲ್ಲಿ ಕಲಿಯಲು ಪ್ರೋತ್ಸಾಹ ನೀಡಿ ವಿವಿಯನ್ನು ಹೆಮ್ಮರವಾಗಿ ಬೆಳೆಸಬೇಕು. ಅದಕ್ಕಾಗಿ ವಿಶ್ವವಿದ್ಯಾಲಯವು ಈ ರೀತಿಯ ಸಾಂಸ್ಕೃತಿಕ, ಕ್ರೀಡಾ ಮತ್ತಿತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ವಿದ್ಯಾರ್ಥಿಗಳನ್ನು ವಿವಿಯತ್ತ ಸೆಳೆಯಬೇಕು ಎಂದು ಸಲಹೆ ನೀಡಿದರು.

ಗೌರವ ಅತಿಥಿಗಳಾಗಿ ಆಗಮಿಸಿದ್ದ ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತಾರಾನಾಥ್ ಮಾತನಾಡಿ, ರಕ್ಷಣಾ, ಕ್ರೀಡೆ, ಸಾಹಿತ್ಯ, ಕಾಫಿ ಮತ್ತಿತರ ಕ್ಷೇತ್ರಗಳಲ್ಲಿ ಕೊಡಗು ಜಿಲ್ಲೆಯು ರಾಷ್ಟ್ರದಲ್ಲಿ ಹೆಸರುವಾಸಿ. ಇದಕ್ಕೆ ಮತ್ತೊಂದು ಗರಿಮೆ ಎಂಬAತೆ ಈ ಕೊಡಗು ವಿಶ್ವವಿದ್ಯಾಲಯ. ಈ ಉತ್ಸವದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಇಂತಹ ಸಾಂಸ್ಕೃತಿಕ ಸ್ಪರ್ಧಾ ಅವಕಾಶಗಳ ಮೂಲಕ ತಮ್ಮ ಪ್ರತಿಭೆ ಪ್ರದರ್ಶನ ಮಾಡಬೇಕು. ನಿಮ್ಮ ಆಲೋಚನೆಗಳು ನಿಮ್ಮನ್ನು ನಿರ್ಮಾಣ ಮಾಡುತ್ತವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಗೌರವಾನ್ವಿತ ಅತಿಥಿಯಾಗಿ ಆಗಮಿಸಿದ್ದ ಗ್ಯಾರಂಟಿ ಅನುಷ್ಠಾನ ಸಮಿತಿಯ ಕುಶಾಲನಗರ ತಾಲೂಕು ಅಧ್ಯಕ್ಷ ವಿ. ಪಿ. ಶಶಿಧರ್ ಮಾತನಾಡಿ, ಕೊಡಗು ಜಿಲ್ಲೆಗೆ ವಿಶ್ವವಿದ್ಯಾಲಯದ ಅಗತ್ಯತೆ ಅರಿತು ಆರಂಭದ ಅತ್ಯಂತ ಸಂಕಷ್ಟ ಸಂಘರ್ಷ ಸಮಯದಲ್ಲಿ ಕೊಡಗು ವಿಶ್ವವಿದ್ಯಾಲಯ ಉಳಿಸಲು ಹಗಲಿರುಳು ಶ್ರಮ ವಹಿಸುತ್ತಿರುವ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಮಾತನಾಡಿ, ಈ ವರ್ಷ ಆರಂಭ ಆಗಿರುವ ಯುವ ವೈಭವ ಇನ್ನೂ ಮುಂದೆ ಪ್ರತಿ ವರ್ಷ ನಡೆಯುತ್ತದೆ. ವಿವಿಯ ಎಲ್ಲ ೨೫ ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳು ಈ ವೇದಿಕೆಯ ಸದುಪಯೋಗಪಡಿಸಿಕೊಳ್ಳಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದರು.

ಈ ಸಂದರ್ಭ ಕೆಪಿಸಿಸಿ ಸದಸ್ಯ ನಟೇಶ್ ಗೌಡ, ಕೊಡಗು ವಿಶ್ವವಿದ್ಯಾಲಯದ ಕುಲಸಚಿವ ಡಾ.ಸುರೇಶ್ ಎಂ, ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರೊ. ಐ.ಕೆ. ಮಂಜುಳಾ, ಎನ್‌ಎಸ್‌ಎಸ್ ಸಂಯೋಜಕಿ ಮತ್ತು ಐಕ್ಯೂಎಸಿ ನಿರ್ದೇಶಕಿÀ ಡಾ. ಗುಣಶ್ರೀ ಬಿ.ಎಸ್. ಉಪಸ್ಥಿತರಿದ್ದರು. ವಿಶ್ವವಿದ್ಯಾಲಯದ ಘಟಕ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳ ೫೦೦ಕ್ಕೂ ಅಧಿಕ ವಿದ್ಯಾರ್ಥಿಗಳು ೧೭ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕೊಡಗು ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಮತ್ತು ಅಂತರ್ ಕಾಲೇಜು ಯುವ ವೈಭವ ಉತ್ಸವದ ಸಂಯೋಜಕ ಮಂಜುನಾಥ್ ಗೌಡ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಜಮೀರ್ ಅಹಮದ್, ಕನ್ನಡ ವಿಭಾಗದ ವಿದ್ಯಾರ್ಥಿ ರಾಕೇಶ್ ಎನ್ ಪಿ ಮತ್ತು ಸೂಕ್ಷ್ಮಾಣು ಜೀವವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸನಿಗಾ ನಿರೂಪಿಸಿದರು. ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಲೋಕೇಶ್ ಭರಣಿ ವಂದಿಸಿದರು.