ವೀರಾಜಪೇಟೆ, ಜೂ. ೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀರಾಜಪೇಟೆ ತಾಲೂಕು ಮಾಯಮುಡಿ ವಲಯದ ಪೊನ್ನಪ್ಪಸಂತೆ ಗ್ರಾಮದಲ್ಲಿ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಮತ್ತು ಗ್ರಾಮಸ್ಥರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಗೀತಾ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಡೆಸುತ್ತಿರುವ ಉದ್ದೇಶದ ಬಗ್ಗೆ ವಿವರಿಸಿದರು. ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಯೋಜನೆಯಿಂದ ನಡೆಸುತ್ತಿರುವ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ ಶ್ವೇತಾ ಮಾತನಾಡಿ, ತಂಬಾಕು ಸೇವನೆ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತಾ, ಹಳ್ಳಿಗಳಲ್ಲಿ ತಂಬಾಕು ಸೇವನೆ ಹೆಚ್ಚಾಗಿದೆೆ. ತಂಬಾಕು ಸೇವನೆಯಿಂದ ಆರೋಗ್ಯಕ್ಕೆ ಹಾನಿಕರ ಕ್ಯಾನ್ಸರ್, ಉಸಿರಾಟದ ತೊಂದರೆ, ಇತರ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚು. ತಂಬಾಕು ಶ್ವಾಸಕೋಶದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ಮಾಹಿತಿ ನೀಡಿದರು. ಸರಕಾರಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಸುಬ್ಬಮ್ಮ ಟಿ.ಆರ್ ಮಾತನಾಡಿ, ಇಂದಿನ ಯುವ ಜನತೆ ತಂಬಾಕು ಸೇವನೆಯಿಂದ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ಇತರ ಹವ್ಯಾಸಗಳಿಂದ ಸಮಾಜ ಹಾಳಾಗುತ್ತಿರುವ ಬಗ್ಗೆ ಪ್ರತಿದಿನ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಉದಾಹರಣೆ ಮೂಲಕ ಮಾಹಿತಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ವಸಂತ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಗ್ರಾಮಸ್ಥರು ಇದ್ದರು.