ಸೋಮವಾರಪೇಟೆ, ಜು. ೬: ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.

ಕಾರ್ಯಕ್ರಮವನ್ನು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಗುಣಮಟ್ಟದ ಇಂಗ್ಲಿಷ್ ಮಾಧ್ಯಮ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಈ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಸಂಸ್ಥೆಯಲ್ಲಿ ಶೇ.೯೦ರಷ್ಟು ರೈತರ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ಎಂಟು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ದಾಖಲಿಸುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯ ಟಾಪರ್‌ಗಳನ್ನು ನೀಡಿರುವುದು ಸಂಸ್ಥೆಯ ಹೆಮ್ಮೆ. ವಿದ್ಯೆಯೇ ನಿಮ್ಮ ಕನಸುಗಳನ್ನು ನನಸಾಗಿಸುವ ಶಕ್ತಿ. ಉತ್ತಮ ಶಿಕ್ಷಣದ ಮೂಲಕ ಆದರ್ಶ ಪ್ರಜೆಗಳಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೋನ್ಸಾಲ್ವೆಸ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣವನ್ನು ಕೇವಲ ಪರೀಕ್ಷೆಗಾಗಿ ಅಲ್ಲ, ಜೀವನ ರೂಪಿಸಿಕೊಳ್ಳುವ ಸಾಧನವಾಗಿ ಪರಿಗಣಿಸಬೇಕು ಎಂದರು. ವಿದ್ಯಾಭ್ಯಾಸವನ್ನು ಫುಲ್‌ಟೈಮ್ ಜಾಬ್ ಎಂದು ಭಾವಿಸಿ ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಯಶಸ್ಸು ನಿಮ್ಮದಾಗುತ್ತದೆ. ನಿರಂತರ ಪರಿಶ್ರಮ ಮತ್ತು ಅಭ್ಯಾಸವೇ ಸಾಧನೆಯ ಮೆಟ್ಟಿಲು ಎಂದು ಸಲಹೆ ನೀಡಿದರು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಜಿಲ್ಲಾ ಮಟ್ಟದ ಟಾಪರ್ ಪವನ್, ಹಾಗೂ ಹಳೆ ವಿದ್ಯಾರ್ಥಿನಿ ಹೆಚ್.ಆರ್. ಜೀವಿತ ತಮ್ಮ ಕಲಿಕಾ ಅನುಭವವನ್ನು ಹಂಚಿಕೊAಡು, ಗುರಿ, ಸಮಯದ ಸದ್ಬಳಕೆ ಮತ್ತು ಆತ್ಮವಿಶ್ವಾಸ ಯಶಸ್ಸಿನ ಮೂಲಮಂತ್ರಗಳಾಗಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಾಗೂ ಗಾಯಕ ಬೇಳೂರು ಗ್ರಾಮದ ವಿವೇಕ್ ರಾಚಪ್ಪ ರ‍್ಯಾಪ್ ಸಾಂಗ್‌ಗಳ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭ ಆಡಳಿತ ಮಂಡಳಿ ಪದಾಧಿಕಾರಿಗಳಾದ ರಾಮಚಂದ್ರ, ಚಂಗಪ್ಪ, ಶ್ರೀಹರಿ, ಉಪನ್ಯಾಸಕರಾದ ಲಾಂಛನ್ ಕಾರೇಕರ್, ರಜಿತ್ ಗಾಂಧಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿಗಳಾದ ದಿಶಿತಾ, ತೇಜಸ್, ಹಸಿನಾ, ಧನಲಕ್ಷಿö್ಮÃ, ಭೂಮಿಕಾ, ಸಾಹಿತ್ಯ, ಗುರುಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು. ಹೊಸ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಗಳು ಆತ್ಮೀಯವಾಗಿ ಬರಮಾಡಿಕೊಂಡರು.