ಕಡಂಗ, ಜು. ೧೭: ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಡಂಗ ಪಟ್ಟಣದಲ್ಲಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಕಾರ್ಯಕ್ರಮ ನಡೆಸಿ, ದ್ವಿಚಕ್ರ ವಾಹನ ಸವಾರರಲ್ಲಿ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭ ಮಾತನಾಡಿದ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ವಾಣಿ ಶ್ರೀ, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ತಮ್ಮ ಜೀವ ರಕ್ಷಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಹೆಲ್ಮೆಟ್ ಧರಿಸುವುದರಿಂದ ಅಪಘಾತದ ಸಂದರ್ಭದಲ್ಲಿ ತಲೆಗೆ ಆಗುವ ಗಂಭೀರ ಗಾಯಗಳನ್ನು ತಡೆಯಬಹುದಾಗಿದ್ದು, ಸಾವಿನ ಸಾಧ್ಯತೆಯನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಹೆಲ್ಮೆಟ್ ಇಲ್ಲದೆ ವಾಹನ ಚಾಲನೆ ಮಾಡುವವರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.