ಮಡಿಕೇರಿ, ಸೆ. ೪: ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲೂಕು ಘಟಕ ವತಿಯಿಂದ ಮಡಿಕೇರಿ ವಿಸ್ತರಣಾ ಶಿಕ್ಷಣ ಘಟಕ ಮತ್ತು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಸಹಯೋಗದಲ್ಲಿ ಅರಣ್ಯ ಮಹಾವಿದ್ಯಾಲಯದ ಗದ್ದೆಯಲ್ಲಿ ಆಯೋಜಿಸಿದ್ದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಜಿಲ್ಲೆಯ ಪತ್ರಕರ್ತರು ಪಾಲ್ಗೊಂಡು ಸಂಭ್ರಮಿಸಿದರು.
ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಘಟಕದ ಕ್ಷೇತ್ರ ಅಧೀಕ್ಷಕ ಡಾ. ಸಿ. ಪ್ರಶಾಂತ್ ಅವರು ಚೆಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ ಕೆಸರುಗದ್ದೆ ಕ್ರೀಡಾಕೂಟ ಎನ್ನುವುದು ಕೊಡಗಿನ ಅನಾದಿಕಾಲದ ಸಂಪ್ರದಾಯಗಳಲ್ಲಿ ಒಂದಾಗಿದೆ, ಇಂತಹ ಕ್ರೀಡಾಕೂಟಗಳಿಂದ ಗ್ರಾಮೀಣ ಪ್ರತಿಭೆಗಳು ಬೆಳಕಿಗೆ ಬರಲು ಸಾಧ್ಯವಾಗುತ್ತದೆ ಎಂದರು.
ಹ್ಯಾಂಡ್ಬಾಲ್, ಹಗ್ಗಜಗ್ಗಾಟ ಹಾಗೂ ಓಟದ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲೆಯ ಸುಮಾರು ೫೦ ಕ್ಕೂ ಹೆಚ್ಚು ಪತ್ರಕರ್ತರು ಪಾಲ್ಗೊಂಡರು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ., ಪೊನ್ನಂಪೇಟೆ ಘಟಕದ ಅಧ್ಯಕ್ಷ ಕಿರಿಯಮಾಡ ರಾಜ್ ಕುಶಾಲಪ್ಪ, ಕೊಡಗು ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ. ಮುರುಳೀಧರ್, ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ ರವಿಕುಮಾರ್, ಗೌರವ ಸಲಹೆಗಾರ, ಬಿ.ಜಿ. ಅನಂತಶಯನ, ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ. ಆರ್ ಏನ್ ಕೆಂಚಾರೆಡ್ಡಿ, ದೈಹಿಕ ಶಿಕ್ಷಣ ಶಿಕ್ಷಕ ಈಶ್ವರ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಮಲ್ಲೇಂಗಡ ಮಧೋಷ್ ಪೂವಯ್ಯ, ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಪೊನ್ನಂಪೇಟೆ ತಾಲೂಕು ಸಂಘದ ಉಪಾಧ್ಯಕ್ಷ ಚಮ್ಮಟೀರ ಪ್ರವೀಣ್, ಕಾರ್ಯದರ್ಶಿ ವಿನೋದ್ ಮೂಡಗದ್ದೆ, ಸಂಘದ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.