ಮಡಿಕೇರಿ, ಸೆ. ೧೩: “ರಕ್ತದಾನ-ಜೀವದಾನ” ಎಂಬ ಸಂದೇಶದೊAದಿಗೆ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ಒಟ್ಟು ೬೫ ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ. ಮಾತನಾಡಿ, ನಿಮ್ಮ ಒಂದು ರಕ್ತದ ಹನಿ ಮತ್ತೊಬ್ಬರ ಬದುಕಿನ ಹೊಸ ಅಧ್ಯಾಯಕ್ಕೆ ನಾಂದಿಯಾಗುತ್ತದೆ” ಎಂದು ಹೇಳಿದರು. ರಕ್ತದಾನವು ಜಾತಿ, ಧರ್ಮ, ಭಾಷೆಯ ಭೇದವಿಲ್ಲದೆ ಮತ್ತೊಂದು ಜೀವಕ್ಕೆ ಜೀವದಾನ ಮಾಡುವ ಶ್ರೇಷ್ಠ ಮಾನವೀಯ ಸೇವೆಯಾಗಿದೆ. ಯುವಶಕ್ತಿ ಸಮಾಜದಲ್ಲಿ ಬದಲಾವಣೆ ತರುವ ಸಾಮರ್ಥ್ಯ ಹೊಂದಿದ್ದು, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಪ್ರಸ್ತುತ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ಹೆಚ್ಚಿನ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಅಗತ್ಯವಿದೆ. ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಲಭ್ಯತೆ ಹೆಚ್ಚಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.
೫೯ ಬಾರಿ ರಕ್ತದಾನ ಮಾಡಿರುವ ಮತ್ತೊಬ್ಬ ಮುಖ್ಯ ಅತಿಥಿ ಖಲೀಲ್ ಕ್ರಿಯೇಟಿವ್ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠ ಮಾನವೀಯ ಸೇವೆಯಾಗಿದ್ದು, ನಮ್ಮ ರಕ್ತ ಮತ್ತೊಬ್ಬರ ಅಮೂಲ್ಯ ಜೀವ ಉಳಿಸಲು ನೆರವಾಗುತ್ತದೆ. ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆ ಬೆಳೆಸಿಕೊಂಡು ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಜೊತೆಗೆ ತಮ್ಮ ಗುರಿಯನ್ನು ಸ್ಪಷ್ಟಪಡಿಸಿಕೊಂಡು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು.
ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬೊಟ್ಟಂಗಡ ಗಣಪತಿ ಅವರು ವಿದ್ಯಾರ್ಥಿಗಳು ಸಮಾಜಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿ ಹಾಗೂ ಜಿಲ್ಲಾ ಆಸ್ಪತ್ರೆ, ಮಡಿಕೇರಿಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ರವಿ ಕರುಂಬಯ್ಯ ಅವರು ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು. ಅಪಘಾತ, ಶಸ್ತçಚಿಕಿತ್ಸೆ, ಹೆರಿಗೆ, ರಕ್ತಹೀನತೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಎದುರಾಗುತ್ತದೆ. ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲದ ಕಾರಣ ಸ್ವಯಂಪ್ರೇರಿತ ರಕ್ತದಾನದಿಂದ ಮಾತ್ರ ರಕ್ತದ ಲಭ್ಯತೆಯನ್ನು ನಿರಂತರವಾಗಿ ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ರಕ್ತದಾನಕ್ಕೂ ಮುನ್ನ ದಾನಿಗಳ ಆರೋಗ್ಯ ತಪಾಸಣೆ ನಡೆಸಿ, ಅರ್ಹರಾದವರಿಂದ ಮಾತ್ರ ರಕ್ತ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು.
ಅತಿಥಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಮಾತುಗಳಿಂದ ಪ್ರೇರಿತರಾದ ವಿದ್ಯಾರ್ಥಿಗಳು, ಬೋಧಕರು ಹಾಗೂ ಸಿಬ್ಬಂದಿ ಉತ್ಸಾಹದಿಂದ ರಕ್ತದಾನ ಮಾಡಿದರು. ಆರೋಗ್ಯ ತಪಾಸಣೆಯ ಬಳಿಕ ಅರ್ಹ ದಾನಿಗಳಿಂದ ಸ್ವಯಂಪ್ರೇರಿತವಾಗಿ ರಕ್ತ ಸಂಗ್ರಹಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿಗಳಾದ ಡಾ. ಶೈಲಶ್ರೀ ಕೆ. ಹಾಗೂ ಅಲೋಕ್ ಬಿಜೈ ಸಂಯೋಜಿಸಿದರು. ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಸೌಮ್ಯ ಕೆ. ಸಹಕರಿಸಿದರು. ಕವನ ಕಾರ್ಯಕ್ರಮ ನಿರೂಪಿಸಿದರು. ಗಾನ ಸ್ವಾಗತಿಸಿದರು ಹಾಗೂ ಸಾನಿಕ ವಂದನಾರ್ಪಣೆ ನೆರವೇರಿಸಿದರು.
ಎನ್.ಸಿ.ಸಿ, ಎನ್.ಎಸ್.ಎಸ್ ಹಾಗೂ ರೆಡ್ಕ್ರಾಸ್ ಘಟಕಗಳ ಅಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘ, ಕೊಡಗು ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಿಬ್ಬಂದಿ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಶಿಬಿರ ಯಶಸ್ವಿಯಾಗಿ ನಡೆಯಿತು.